ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಮನೆಯಲ್ಲಿ ರಹಸ್ಯವಾಗಿ ಶಾಸಕರ ಜೊತೆ ಮಾತುಕತೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಮಲ ಫಿಕ್ಸ್ ಆಗಿದ್ಯಾ ಎಂಬ ಮಾತುಗಳು ಕೇಳಿ ಬರುತ್ತಿದೆ.
ರಮೇಶ್ ಜಾರಕಿಹೊಳಿ ತಮ್ಮ ನಿವಾಸದಲ್ಲಿ ಕಾಂಗ್ರೆಸ್ಸಿನ 10 ಅತೃಪ್ತ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಜಾರಕಿಹೊಳಿ ಜೊತೆ ಅತೃಪ್ತ ಶಾಸಕರ ಜೊತೆಗಿನ ಮಾತುಕತೆಯ ದೃಶ್ಯಾವಳಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ರಮೇಶ್ ಜಾರಕಿಹೊಳಿ ಜೊತೆ ಮುಳಬಾಗಿಲು ಪಕ್ಷೇತರ ಶಾಸಕ ನಾಗೇಶ್, ರಾಣೆಬೆನ್ನೂರು ಪಕ್ಷೇತರ ಶಾಸಕ ಆರ್. ಶಂಕರ್, ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ, ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ಸೇರಿದಂತೆ 10 ಶಾಸಕರ ಮಾತುಕತೆ ನಡೆಸಿದ್ದಾರೆ.
ಇವರೆಲ್ಲರೂ ಇತ್ತೀಚೆಗಷ್ಟೆ ಸಿಎಂ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ ಶಾಸಕರು, ನಾವು ಕಾಂಗ್ರೆಸ್ ಪಕ್ಷ ಬಿಡಲ್ಲ, ಇಲ್ಲೇ ಇರುತ್ತೇವೆ ಎಂದು ಹೇಳಿದ್ದರು. ಇತ್ತ ಬಿ.ಎಸ್ ಯಡಿಯೂರಪ್ಪ ಹೆಚ್ಡಿಕೆ ಸರ್ಕಾರ ಬಿದ್ದರೆ ನಾವು ಸರ್ಕಾರ ರಚಿಸುತ್ತೇವೆ. ನಾವು ಯಾವುದೇ ಆಪರೇಷನ್ ಮಾಡಲ್ಲ ಎಂದಿದ್ದರು. ಆದರೆ ರಮೇಶ್ ಜಾರಕಿಹೊಳಿ ನಡೆಯಿಂದ ಈಗ ಗೊಂದಲ ಮೂಡಿದೆ.
10 ಅತೃಪ್ತ ಶಾಸಕರ ಸಭೆಯಿಂದ ದೋಸ್ತಿಗಳಿಗೆ ಫುಲ್ ಟೆನ್ಶನ್ ಆಗಿದ್ದು, ಸಿಎಂ ಕುಮಾರಸ್ವಾಮಿ ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತಕತೆ ನಡೆಸಿದ್ದಾರೆ.