ಮಡಿಕೇರಿ: ಪೌರತ್ವ ತಿದ್ದುಪಡಿ ಕಾಯ್ದೆ ಖಂಡಿಸಿ ನಗರದ ಗಾಂಧಿ ಮೈದಾನದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಾಕಷ್ಟು ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಹಾಗೂ ಎನ್ಆರ್ಸಿ ದೇಶದ ಅಲ್ಪಸಂಖ್ಯಾತರ ಹಕ್ಕುಗಳಿಗೆ ಮಾರಕವಾಗಿವೆ. ಇದು ಕೇವಲ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಅವರ ಹಿಂಬಾಲಕರ ಕಾಯ್ದೆಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೆಪಿಸಿಸಿ ವೀಕ್ಷಕ ಹ್ಯಾರೀಸ್ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಾಹಿತಿಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಕಾಯ್ದೆ ವಿರೋಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಜನ ಬಿಜೆಪಿಯವರಿಗೆ ಸರಿಯಾಗಿ ಬುದ್ಧಿ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.