ನವದೆಹಲಿ: ಭದ್ರತಾ ಲೋಪದ ಕಾರಣದಿಂದಾಗಿ ಪಂಜಾಬ್ನಲ್ಲಿ ರ್ಯಾಲಿ ಮತ್ತು ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡುವ ಕಾರ್ಯಕ್ರಮ ರದ್ದುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವಾಪಸ್ಸಾದರು ಎಂಬ ಬಿಜೆಪಿ ಆರೋಪವನ್ನು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ತಳ್ಳಿಹಾಕಿದ್ದಾರೆ. ಸರ್ಕಾರದಿಂದ ಯಾವುದೇ ಭದ್ರತಾ ಲೋಪವಾಗಿಲ್ಲ, ಜನರೇ ಇಲ್ಲದ ಕಾರಣ ಬಿಜೆಪಿ ರ್ಯಾಲಿ ರದ್ದುಗೊಳಿಸಿದೆ ಎಂದು ಹೇಳಿದ್ದಾರೆ.
- Advertisement 2
ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಬೇಕಿತ್ತು. ಆದರೆ ಕಾರ್ಯಕ್ರಮ ರದ್ದುಗೊಳಿಸಿ ಪ್ರಧಾನಿ ಮೋದಿ ಅವರು ವಾಪಸ್ಸಾಗಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಕಾರ್ಯಕ್ರಮ ಸ್ಥಳಕ್ಕೆ ಹೆಲಿಕಾಪ್ಟರ್ನಲ್ಲಿ ಪ್ರಧಾನಿಯನ್ನು ಕರೆದೊಯ್ಯಲು ಸಾಧ್ಯವಾಗಲಿಲ್ಲ. ಹೀಗಾಗಿ ಹೆಲಿಕಾಪ್ಟರ್ ಪ್ರಯಾಣ ಮೊಟಕುಗೊಳಿಸಿ, ರಸ್ತೆ ಮಾರ್ಗವಾಗಿ ಕಾರ್ಯಕ್ರಮ ಸ್ಥಳಕ್ಕೆ ತೆರಳಲು ಕ್ರಮವಹಿಸಲಾಗಿತ್ತು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು
- Advertisement 3
- Advertisement 4
ಆದರೆ ಫ್ಲೈಓವರ್ ಬಳಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದರಿಂದ ಪ್ರಧಾನಿ ಮೋದಿ ಅವರು ಫ್ಲೈ ಓವರ್ನಲ್ಲೇ ಸಿಲುಕುವಂತಾಯಿತು. ಇದರಿಂದ ಅವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಇದಕ್ಕೆ ಭದ್ರತಾ ಲೋಪ ಮತ್ತು ಪಂಜಾಬ್ ಸರ್ಕಾರವೇ ಕಾರಣ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಆದರೆ ಈ ಆರೋಪವನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. ಪ್ರಧಾನಿ ಮೋದಿ ಅವರು ಪಾಲ್ಗೊಳ್ಳಬೇಕಿದ್ದ ಸಮಾರಂಭದಲ್ಲಿ ಜನರೇ ಇರಲಿಲ್ಲ. ಬರೀ ಖಾಲಿ ಕುರ್ಚಿಗಳಷ್ಟೇ ಇದ್ದವು. 70 ಸಾವಿರ ಜನರು ಪಾಲ್ಗೊಳ್ಳಬೇಕಿದ್ದ ರ್ಯಾಲಿಯಲ್ಲಿ ಕೇವಲ 700 ಮಂದಿ ಮಾತ್ರ ಇದ್ದರು. ಆದ ಕಾರಣ ಕಾರ್ಯಕ್ರಮ ನಡೆಸದೇ ವಾಪಸ್ಸಾಗಿದ್ದಾರೆ ಎಂದು ಪಂಜಾಬ್ ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ
ಯಾವುದೇ ಭದ್ರತಾ ಲೋಪವಾಗಿಲ್ಲ. ಪಿಎಂ ರ್ಯಾಲಿ ಹಿನ್ನೆಲೆಯಲ್ಲಿ ಭದ್ರತೆಗೆ ಸಂಬಂಧಿಸಿದಂತೆ ನಾನು ನಿನ್ನೆ ರಾತ್ರಿಯೂ ಮೇಲ್ವಿಚಾರಣೆ ನಡೆಸಿದ್ದೇನೆ. ಪ್ರಧಾನಿ ಅವರ ರಸ್ತೆ ಮಾರ್ಗ ಪ್ರಯಾಣ ವ್ಯವಸ್ಥೆ ಕೊನೆ ಕ್ಷಣದಲ್ಲಿ ಮಾಡಲಾಗಿದೆ. ಅದಕ್ಕೂ ಮೊದಲು ಅವರು ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುವ ಯೋಜನೆ ಹಾಕಿಕೊಂಡಿದ್ದರು ಎಂದು ಸಿಎಂ ತಿಳಿಸಿದ್ದಾರೆ.