ಬೆಂಗಳೂರು: ದೋಸ್ತಿ ಸರ್ಕಾರದ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿರುವ ನಾಲ್ವರು ಶಾಸಕರನ್ನು ಅನರ್ಹ ಮಾಡುವಂತೆ ವಿಧಾನಸಭಾ ಅಧ್ಯಕ್ಷರಾದ ರಮೇಶ್ ಕುಮಾರ್ ಅವರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ದೂರು ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಅವರು ನಾಲ್ವರು ಶಾಸಕರ ವಿರುದ್ಧ ನೀಡಿದ್ದ ದೂರಿನ ಪತ್ರವನ್ನು ಸ್ಪೀಕರ್ ಅವರಿಗೆ ನೀಡಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಪದೇ ಪದೇ ಪಕ್ಷದ ಸಭೆಗೆ ಗೈರು ಹಾಜರಿ ಆಗಿದ್ದು, ನೋಟಿಸ್ ನೀಡಿದರು ಕೂಡ ಶಾಸಕರು ಸಮರ್ಪಕ ಉತ್ತರ ನೀಡಿಲ್ಲ. ಅಲ್ಲದೇ ಈ ಬಗ್ಗೆ ಪಕ್ಷದ ನಾಯಕ ಮುಂದೇ ಹಾಜರಾಗಿ ಯಾವುದೇ ವಿವರಣೆಯನ್ನು ನೀಡಿಲ್ಲ. ಪರಿಣಾಮ ಪಕ್ಷ ಶಿಸ್ತು ಉಲ್ಲಂಘನೆ ಹಾಗೂ ಪಕ್ಷ ವಿರೋಧಿ ಚಟುವಟಿಕೆ ಅಡಿಯಲ್ಲಿ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ ಎಂದು ತಿಳಿಸಿದರು.
ಸ್ಪೀಕರ್ ಅವರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಆಡಿ ಶಾಸಕತ್ವವನ್ನು ಅನರ್ಹಗೊಳಿಸಲು ದೂರು ನೀಡಲಾಗಿದ್ದು, ಈ ಸಂಬಂಧ ಪಕ್ಷ ಜಾರಿ ಮಾಡಿದ್ದ ವಿಪ್ ಹಾಗೂ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಉಮೇಶ್ ಜಾಧವ್ ಮತ್ತು ಬಿ. ನಾಗೇಂದ್ರ ಅವರಿಗೆ ನೀಡಲಾಗಿದ್ದ ನೋಟಿಸ್ ದಾಖಲೆಯನ್ನು ನೀಡಿದ್ದೇವೆ. ಇವುಗಳ ಆಧಾರದ ಮೇಲೆ ಸ್ಪೀಕರ್ ಅವರು ಕ್ರಮಕೈಗೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv