ಬೆಳಗಾವಿ: ಶತಮಾನ ಹಿಂದೆ ಮಹಾತ್ಮ ಗಾಂಧಿ (Mahatma Gandhi) ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ (Congress) ಅಧಿವೇಶನವನ್ನು ಸ್ಮರಣಿಯಗೊಳಿಸಲು ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ (Belagavi) ಸಜ್ಜಾಗಿದೆ. 1924ರ ಡಿಸೆಂಬರ್ 26 ಹಾಗೂ 27ರಂದು ಮಹಾತ್ಮ ಗಾಂಧೀಜಿ ಬೆಳಗಾವಿ ಭೇಟಿ ನೀಡಿ, ಕಾಂಗ್ರೆಸ್ ಅಧಿವೇಶದಲ್ಲಿ ಭಾಗಿಯಾಗಿದ್ದರು. ಈ ಅಧಿವೇಶನಕ್ಕೆ 100 ವರ್ಷಗಳಾದ ಹಿನ್ನಲೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹಾ ಸಮಾವೇಶ ನಡೆಯಲಿದೆ. ಇದಕ್ಕೆ ಸತ್ಯಾಗ್ರಹ ಬೈಠಕ್ ಎಂದು ಕಾಂಗ್ರೆಸ್ ನಾಮಕರಣ ಮಾಡಿದೆ. ಮೈಸೂರು ದಸರಾದಂತೆ ಗಡಿ ಜಿಲ್ಲೆ ಕಂಗೊಳಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರು ಹಾಗೂ ಘಟಾನುಘಟಿ ನಾಯಕರು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.
ಇಂದು ಏನೇನು ಕಾರ್ಯಕ್ರಮ?
ಬೆಳಗ್ಗೆ 10 ಗಂಟೆಗೆ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಂಡರೆ 10:45ಕ್ಕೆ ಖಾದಿ ಉತ್ಸವ ಹಾಗೂ ಮಳಿಗೆಗಳ ಉದ್ಘಾಟನೆಯಾಗಲಿದೆ. ಮಧ್ಯಾಹ್ನ 12:30ಕ್ಕೆ ದೆಹಲಿಯಿಂದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು, ನಗರದ ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಬೆಂಗಳೂರು| ನಂದಿನಿ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ ಮಾಡಿದ ಸಿಎಂ
11:15ಕ್ಕೆ ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ ಉದ್ಘಾಟನೆ, ಮಧ್ಯಾಹ್ನ 3 ಗಂಟೆಗೆ ಟಿಳಕವಾಡಿಯ ವೀರಸೌಧದಲ್ಲಿ ಎಐಸಿಸಿ (AICC) ಕಾರ್ಯಕಾರಣಿ ಸಭೆ ನಡೆಯಲಿದೆ. ನಂತರ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಎಐಸಿಸಿ ಕಾರ್ಯಕಾರಣಿ ಸಭೆ ನಡೆಯಲಿದೆ.
ಸಮಾವೇಶದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಮಹಾತ್ಮ ಗಾಂಧಿ 1924 ಡಿಸೆಂಬರ್ 26ರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿದ್ದರು.ಅದೇ ಸಮಯಕ್ಕೆ ಸರಿಯಾಗಿ ಅಂದರೆ ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ (CWC Session) ಆರಂಭವಾಗಲಿದೆ. ಈ ಕಾರ್ಯಕ್ರಮ ಆಯೋಜನೆ ಮಾಡುವ ಅವಕಾಶ ನನಗೆ ಸಿಕ್ಕಿದೆ. ಶತಮಾನೋತ್ಸವ ಬೇರೆ ಕಡೆ ಮಾಡಬಾರದು. ಇಲ್ಲೇ ನಡೆಯಬೇಕು ಅಂತ ನಾನು ಹಠ ಹಿಡಿದು ಇಲ್ಲೇ ಮಾಡಲು ತೀರ್ಮಾನ ಮಾಡಿದೆವು ಎಂದಿದ್ದಾರೆ.
ಒಟ್ಟಿನಲ್ಲಿ ಕಾಂಗ್ರೆಸ್ ಅಧಿವೇಶದನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಬೆಳಗಾವಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಈ ಅಧಿವೇಶನದ ಮೂಲಕ ರಾಜ್ಯಕ್ಕೆ ಹೊಸದೊಂದು ಸಂದೇಶ ರವಾನಿಸುವ ಕೆಲಸ ಕೈ ಪಡೆ ಮಾಡುತ್ತಿದೆ.