ಬೆಂಗಳೂರು: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್ಐಆರ್ ದಾಖಲಿಸಿರುವ ವಿಚಾರಕ್ಕೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ (Chetan Kumar) ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿರುವ ಅವರು, ಫೆಬ್ರುವರಿಯಲ್ಲಿ ಬಿಜೆಪಿ ಶಾಸಕ ಅಶ್ವತ್ಥನಾರಾಯಣ್ (Ashwath Narayan) ಅವರು, ‘ಟಿಪ್ಪು ಸುಲ್ತಾನ್ʼನಂತೆ ಸಿದ್ದರಾಮಯ್ಯನವರನ್ನು (Siddaramaiah) ಮುಗಿಸಿ’ ಎಂದು ಬೆಂಕಿ ಹಚ್ಚುವ, ಸ್ವೀಕಾರಾರ್ಹವಲ್ಲದ ಹೇಳಿಕೆ ನೀಡಿದ್ದರು. ನಂತರ ಅವರು ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿದರು. ಇದೀಗ ಶಾಸಕರ ಹೇಳಿಕೆಗೆ ಕಾಂಗ್ರೆಸ್ ಎಫ್ಐಆರ್ ದಾಖಲಿಸಿದೆ. ಇದು ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣದಂತೆ ತೋರುತ್ತಿದೆ. ಕಾಂಗ್ರೆಸ್ ಭಾರೀ ಜನಾದೇಶವನ್ನ ಗೆದ್ದಿದೆ—ಈಗ ಅದು ತನ್ನ ಸ್ವಂತ ಅಹಂಕಾರಗಳನ್ನ ಪೂರೈಸುವ ಬದಲು ಕರ್ನಾಟಕದ ಜನರ ಸೇವೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಮೇ 24 ರಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ಅವರ ವಿರುದ್ಧ ದೂರು ನೀಡಿ, ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: `ಸಿದ್ದರಾಮಯ್ಯರನ್ನ ಹತ್ಯೆ ಮಾಡಿ’ ಹೇಳಿಕೆ ಆರೋಪ – ಅಶ್ವಥ್ ನಾರಾಯಣ್ ವಿರುದ್ಧ FIR
ಅಶ್ವಥ್ ನಾರಾಯಣ್ ಹೇಳಿದ್ದೇನು?
ಫೆಬ್ರವರಿ 15ರಂದು ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ – ಸಚಿವ ಎಂ.ಬಿ ಪಾಟೀಲ್