-ರಾಮನಗರ ಅಭ್ಯರ್ಥಿಯ ಹೆಸ್ರು ಇನ್ನೂ ರಹಸ್ಯ
ಶಿವಮೊಗ್ಗ: ಲೋಕಸಭಾ ಉಪಚುನಾವಣೆಗೆ ಬಳ್ಳಾರಿ ಜೆ. ಶಾಂತ, ಜಮಖಂಡಿಯಲ್ಲಿ ಶ್ರೀಕಾಂತ್ ಕುಲಕರ್ಣಿ, ಮಂಡ್ಯದಲ್ಲಿ ಡಾ. ಸಿದ್ಧರಾಮಯ್ಯರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಿಕಾರಿಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಿಎಸ್ವೈ, ಬಳ್ಳಾರಿಯಿಂದ ಜೆ. ಶಾಂತ, ಜಮಖಂಡಿಯಲ್ಲಿ ಶ್ರೀಕಾಂತ್ ಕುಲಕರ್ಣಿ ಹಾಗೂ ಮಂಡ್ಯದಲ್ಲಿ ಡಾ. ಸಿದ್ದರಾಮಯ್ಯರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಎದುರು ನಾಳೆ, ನಾಡಿದ್ದರಲ್ಲಿಯೇ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಅಂತ ಸ್ಪಷ್ಟಪಡಿಸಿದ್ರು.
ದೂರದೃಷ್ಟಿ ಇಲ್ಲದೇ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. 20 ದಿನಗಳಲ್ಲಿ ಐದು ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕಿದೆ. ಯಾವ ರೀತಿ ಯಡಿಯೂರಪ್ಪ ಅವರನ್ನು ಗೆಲ್ಲಿಸಿದ್ದಿರೋ ಅದೇ ರೀತಿ ರಾಘವೇಂದ್ರ ಅವರನ್ನು ಗೆಲ್ಲಿಸಬೇಕಿದೆ. 50 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಘವೇಂದ್ರರನ್ನು ಗೆಲ್ಲಿಸಿ ಎಂದು ಬಿಎಸ್ವೈ ಅವರು ಜನತೆಯಲ್ಲಿ ಮನವಿ ಮಾಡಿಕೊಂಡರು.
ನಮ್ಮ ವಿರುದ್ಧದ ಅಭ್ಯರ್ಥಿ ಬಗ್ಗೆ ಮಾತನಾಡುವವರ ಹೆಸರು ಹೇಳುವ ಅಗತ್ಯವಿಲ್ಲ. ಪ್ರತಿ ಬೂತ್ ನಲ್ಲಿ ಶೇ. 70 ಕ್ಕಿಂತ ಮತಗಳು ಕಡಿಮೆ ಬರಬಾರದು ಎಂದು ಕಾರ್ಯಕರ್ತರಿಗೆ ಮನವಿ ಮಾಡಿಕೊಂಡರು. ಬರುವ ಒಂದು ವರ್ಷದಲ್ಲಿ ಕ್ಷೇತ್ರದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಆರಂಭಿಸುವುದು ನನ್ನ ಜವಾಬ್ದಾರಿ. ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸುವುದು ನಮ್ಮ ಸಂಕಲ್ಪ ಅಂತ ಅವರು ಹೇಳಿದ್ರು.
ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಅವರಿಂದ ತೆರವಾಗಿರುವ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದ್ದು, ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಇತ್ತ ಶಾಸಕ ಸಿದ್ದು ನ್ಯಾಮೆಗೌಡ ಅಕಾಲಿಕ ನಿಧನ ಮತ್ತು ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಗಳಿಗೂ ಇದೇ ವೇಳೆ ಉಪ ಚುನಾವಣೆ ನಡೆಯಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv