ಕಲಬುರಗಿ: ನಗರದಲ್ಲಿ ವೃದ್ಧರೊಬ್ಬರಿಗೆ ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾಗಿದೆ.
ಸೌದಿ ಅರೇಬಿಯಾದಿಂದ ಬಂದಿದ್ದ 75 ವರ್ಷದ ವೃದ್ಧನಿಗೆ ಕೊರೊನಾ ವೈರಸ್ ತಗುಲಿರುವ ಶಂಕೆ ಹಿನ್ನೆಲೆಯಲ್ಲಿ ಅವರನ್ನು ಜೀಮ್ಸ್ ಆಸ್ಪತ್ರೆಯಿಂದ ಹೈದರಬಾದ್ಗೆ ಶಿಫ್ಟ್ ಮಾಡಲಾಗಿದೆ. ವೃದ್ಧನ ಕುಟುಂಬಸ್ಥರು ಹೈದರಾಬಾದ್ಗೆ ಕರೆದೊಯ್ದಿದ್ದಾರೆ. ಗಂಟಲು ದ್ರವ ಸಂಗ್ರಹಿಸಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್ಗೆ ಕಳುಹಿಸಲಾಗಿತ್ತು. ಆದರೆ ವರದಿಗೂ ಮುನ್ನವೇ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ಅವರನ್ನು ಹೈದರಾಬಾದ್ಗೆ ಶಿಫ್ಟ್ ಮಾಡಿದ್ದಾರೆ.
ವೃದ್ಧ ಫೆಬ್ರವರಿ 29 ರಂದು ಸೌದಿ ಅರೇಬಿಯಾದಿಂದ ಬಂದಿದ್ದರು. ಮಾರ್ಚ್ 5 ರಂದು ಜ್ವರ, ಕೆಮ್ಮು ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ಚಿಕಿತ್ಸೆ ನೀಡಲಾಗುತ್ತಿತ್ತು. ಈಗಾಗಲೇ ಕುಟುಂಬಸ್ಥರನ್ನು ಕೂಡ ತಪಾಸಣೆ ಮಾಡಿರುವ ವೈದ್ಯರು, ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.
ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 61ಕ್ಕೆ ಹೆಚ್ಚಳವಾಗಿದೆ. ಈಗಾಗಲೇ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಬ್ರಿಟನ್ ನಲ್ಲಿ ಮೃತಪಟ್ಟಿದ್ದಾರೆ. ಇತ್ತ ಪುಣೆಯಲ್ಲಿ ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕೇರಳದಲ್ಲಿ 12 ಜನಕ್ಕೆ ತಗುಲಿದ್ದ ಕೊರೊನಾ ಒಂದೇ ದಿನದಲ್ಲಿ 19ಕ್ಕೆ ಹೆಚ್ಚಾಗಿದೆ. ನಿನ್ನೆಯಷ್ಟೇ ಸಿಎಂ ಪಿಣರಾಯಿ ವಿಜಯನ್ ಅವರು ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, 7ನೇ ತರಗತಿವರೆಗೆ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದ್ದರು. ಅಲ್ಲದೆ ಮಾ.31ರವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡುವ ಕುರಿತು ಕೂಡ ಸರ್ಕಾರ ನಿರ್ಧಾರ ಕೈಗೊಂಡಿದೆ.