ಕಲಬುರಗಿ: ಲಿಂಗೈಕ್ಯರಾದ ಮಾತಾ ಮಾಣಿಕೇಶ್ವರಿ ಅಮ್ಮನವರ ಅಂತಿಮ ದರ್ಶನಕ್ಕೆ ಜಿಲ್ಲೆಯ ಯಾನಗುಂದಿ ಮಾಣಿಕ್ಯಗಿರಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಆದರೆ ದುಃಖತಪ್ತರಾದ ಭಕ್ತರಿಗೂ ಕೊರೊನಾ ವೈರಸ್ ಭೀತಿ ಎದುರಾಗಿದ್ದು, ಮಾಸ್ಕ್ ಧರಿಸಿಕೊಂಡು ಬರುತ್ತಿದ್ದಾರೆ.
ಮಾತೆ ಮಾಣಿಕೇಶ್ವರಿಗೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಸೇರಿದಂತೆ ಹೊರ ರಾಜ್ಯಗಳ ಭಕ್ತರೂ ಇದ್ದು, ತೆಲಂಗಾಣ ಭಾಗದಲ್ಲೇ ಹೆಚ್ಚು ಸಂಖ್ಯೆಯ ಭಕ್ತರಿದ್ದಾರೆ. ಹೀಗಾಗಿ ಅಂತಿಮ ದರ್ಶನಕ್ಕೆ ಬಂದ ಭಕ್ತರಲ್ಲಿ ತೆಲುಗು ಭಾಷಿಕರೇ ಹೆಚ್ಚು. ತೆಲಂಗಾಣದಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಉಳಿದ ಭಕ್ತರು ಸಹ ಭೀತಿಯಲ್ಲಿದ್ದಾರೆ. ಹೀಗಾಗಿ ಮುಖಕ್ಕೆ ಮಾಸ್ಕ್, ಕರ್ಚೀಫ್, ಬಟ್ಟೆ ಸುತ್ತಿಕೊಂಡು ಬರುತ್ತಿದ್ದಾರೆ.
ಕೊರೊನಾ ವೈರಸ್ ಬಗ್ಗೆ ಜನ ಭಯಬೀತರಾಗಿರುವ ಹಿನ್ನೆಲೆ ಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಇಲಾಖೆ ಮುಂದಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿಗಳ ಐದು ತಂಡಗಳು ಔಷಧಿಯೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಮಾಹಿತಿ ನೀಡುತ್ತಿವೆ. ಪೊಲೀಸರು ಸಹ ಮಾಸ್ಕ್ ಗಳನ್ನ ಧರಿಸಿ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿದ್ದಾರೆ.
ಹೈದರಾಬಾದ್ ಕರ್ನಾಟಕ ಭಾಗದ ನಡೆದಾಡುವ ದೇವರು, ಪೀಠಾಧಿಪತಿ ಮಾತಾ ಮಾಣಿಕೇಶ್ವರಿ ಅಮ್ಮನವರು ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯ ಮಠದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.