ಶಿವಮೊಗ್ಗ: ಕೊರೊನಾ ಮಹಾಮಾರಿಯಿಂದ ಈಡೀ ದೇಶವೇ ಲಾಕ್ಡೌನ್ ಆಗಿದ್ದು, ಬಡ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ಇದನ್ನರಿತ ಶಿವಮೊಗ್ಗದ ಪೊಲೀಸ್ ಪೇದೆಯೊಬ್ಬರು ತಮ್ಮ ಸ್ವಂತ ಖರ್ಚಿನಲ್ಲಿ ಬಡವರಿಗೆ ದಿನಸಿ ವಸ್ತುಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯ ಪೇದೆ ಲಕ್ಷ್ಮಣ್ ಅವರು ಸದ್ಯ ಭದ್ರಾವತಿ ತಾಲೂಕಿನ ಉಂಬ್ಳೆಬೈಲು ಉಪ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಂಬ್ಳೆಬೈಲು ಗ್ರಾಮದಲ್ಲಿ ಕಡು ಬಡವರನ್ನು ಗುರುತಿಸಿ ಅವರಿಗೆ ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ, ಟೀ ಪುಡಿ, ಖಾರದ ಪುಡಿ ಸೇರಿದಂತೆ ದಿನ ಬಳಕೆಯ ವಸ್ತುಗಳ ಕಿಟ್ನ್ನು ಸ್ವತಃ ತಾವೇ ವಿತರಿಸಿದ್ದಾರೆ.
ಉಂಬ್ಳೆಬೈಲು ಗ್ರಾಮದ 10 ಕುಟುಂಬಗಳಿಗೆ ಆಹಾರದ ಕಿಟ್ ಅನ್ನು ವಿತರಿಸಿದ್ದು, ಪೇದೆ ಲಕ್ಷ್ಮಣ್ ಮಾಡಿರುವ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.