– ತರಕಾರಿ, ಹಾಲು, ಆಹಾರ ಸಾಮಗ್ರಿ ವಿತರಣೆ
ಹುಬ್ಬಳ್ಳಿ: ಅಗತ್ಯ ವಸ್ತುಗಳನ್ನು ವಸತಿ ಬಡಾವಣೆಗಳಲ್ಲಿಯೇ ಪೂರೈಸಲು ಧಾರವಾಡ ಜಿಲ್ಲಾಡಳಿತ ಮುಂದಾಗಿದೆ.
ಕೊರೊನಾ ವೈರಸ್ ನಿಯಂತ್ರಿಸಲು 21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ಸಾಮಗ್ರಿಗಳ ಕೊರತೆಯಾಗದಂತೆ ಸಣ್ಣ ವ್ಯಾಪಾರಿಗಳು, ತಳ್ಳುವ ಗಾಡಿಗಳು ಹಾಗೂ ಆಟೋಗಳ ಮೂಲಕ ಜನವಸತಿ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಧಾರವಾಡ ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಈ ನಿರ್ಧಾರ ಪ್ರಕಟಿಸಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಎಲ್ಲ ವಾರ್ಡುಗಳ ವ್ಯಾಪ್ತಿಯ ವಲಯ ಸಹಾಯಕ ಆಯುಕ್ತರು, ಸಂಬಂಧಿಸಿದ ಪೊಲೀಸ್ ಠಾಣೆ ವ್ಯಾಪ್ತಿಯ ಅಧಿಕಾರಿಗಳು, ತರಕಾರಿ, ಅಗತ್ಯ ವಸ್ತುಗಳು, ಸಗಟು ಮತ್ತು ಸಣ್ಣ ವ್ಯಾಪಾರಿಗಳ ಸಭೆ ನಡೆಸಿದರು. ಈ ವೇಳೆ ಜನ ವಸತಿ ಸ್ಥಳಗಳಲ್ಲಿ ತಳ್ಳುವ ಗಾಡಿಗಳು, ಆಟೋಗಳ ಮೂಲಕ ತರಕಾರಿ ಪೂರೈಸಲು ಉತ್ತೇಜನ ನೀಡುವಂತೆ ಸೂಚಿಸಿದರು.
ಜನವಸತಿ ಸ್ಥಳಗಳಿಗೆ ಪೂರೈಸಲು ಅಗತ್ಯ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲು ತಿಳಿಸಿದರು. ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಹೋಬಳಿ ಪ್ರದೇಶಗಳಲ್ಲಿಯೂ ಅಲ್ಲಿನ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸರು ಇದೇ ಮಾದರಿಯಲ್ಲಿ ಕ್ರಮ ಕೈಗೊಂಡು ಜನರಿಗೆ ತರಕಾರಿ ಮತ್ತು ಅಗತ್ಯ ವಸ್ತುಗಳನ್ನು ತಲುಪಿಸಬೇಕು. ತಳ್ಳುವ ಗಾಡಿ ಅಥವಾ ಆಟೋಗಳಲ್ಲಿ ಪ್ರತಿದಿನ ಮಾರಾಟಕ್ಕೆ ಅವಕಾಶ ನೀಡಬೇಕು. ಅಲ್ಲದೆ ಈ ವ್ಯಾಪಾರಕ್ಕೆ ಸಮಯದ ನಿರ್ಬಂಧವಿಲ್ಲ ಎಂದು ತಿಳಿಸಿದ್ದಾರೆ.
ಜನತೆ ಮಾರುಕಟ್ಟೆಗೆ ಬರುವ ಅಗತ್ಯವಿಲ್ಲ, ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಅವರಿರುವ ಸ್ಥಳಗಳಲ್ಲಿಯೇ ಸುಲಭವಾಗಿ ದೊರೆಯುತ್ತವೆ. ಜನರು ಯಾವುದೇ ಕಾರಣಕ್ಕೂ ಮಾರುಕಟ್ಟೆಗೆ ಬರಬಾರದು. ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಅಗತ್ಯದ ವಸ್ತುಗಳನ್ನು ಖರೀದಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.