ಚಾಮರಾಜನಗರ: ಜಿಲ್ಲೆಯ ಯಳಂದೂರಿನ ಆದರ್ಶ ಶಾಲೆಯ ಬಳಿಕ ಇದೀಗ ಹನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಜಿಲ್ಲೆಯಲ್ಲಿ ಇದೀಗ ಆತಂಕ ಶುರುವಾಗಿದೆ.
ಹನೂರು ಪಟ್ಟಣದ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿ ಹಾಗೂ ಓರ್ವ ವಿದ್ಯಾರ್ಥಿನಿಗೆ ಕೋವಿಡ್ ದೃಢಪಟ್ಟಿದೆ. ಶಾಲೆಗಳು ಪ್ರಾರಂಭವಾಗುವ ಮುನ್ನ ಎಲ್ಲ ವಿದ್ಯಾರ್ಥಿಗಳ ಕೋವಿಡ್ ನೆಗೆಟಿವ್ ರಿಪೋರ್ಟ್ ಪಡೆದೇ ಶಾಲೆಗೆ ದಾಖಲು ಮಾಡಿಕೊಳ್ಳಲಾಗಿತ್ತು. ಆದರೆ ಕಳೆದ ಒಂದು ವಾರದ ಹಿಂದೆ ಕೆಲ ವಿದ್ಯಾರ್ಥಿಗಳಲ್ಲಿ ನೆಗಡಿ, ಕೆಮ್ಮು, ಶೀತ ಜ್ವರ ಕಂಡು ಬಂದ ಹಿನ್ನೆಲೆ ಹನೂರು ಪಟ್ಟಣದ ಕೋವಿಡ್ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡಿಸಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿಕೊಡಲಾಗಿತ್ತು. ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದ ಸ್ವ್ಯಾಬ್ ಮಾದರಿಯಲ್ಲಿ 3 ವಿದ್ಯಾರ್ಥಿಗಳಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕಳೆದ ವಾರವಷ್ಟೇ ಯಳಂದೂರಿನ ಆದರ್ಶ ಶಾಲೆಯ ಇಬ್ಬರು ಬಾಲಕರಿಗೆ ಕೊರೊನಾ ಸೋಂಕು ತಗುಲಿತ್ತು. ವಿದ್ಯಾರ್ಥಿಗಳು ಸಂತೇಮರಹಳ್ಳಿ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಮೊರಾರ್ಜಿ ಶಾಲೆ ವಿದ್ಯಾರ್ಥಿಗಳಲ್ಲೂ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.