ನವದೆಹಲಿ: ಕೊರೊನಾ ವೈರಸ್ನಿಂದ ಚೇತರಿಸಿಕೊಂಡ ವ್ಯಕ್ತಿಗಳು, ಸೋಂಕಿತ ರೋಗಿಗಳಿಗೆ ಧರ್ಮ ಮೀರಿ ಪ್ಲಾಸ್ಮಾ ದಾನ ಮಾಡಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
We are asking the patients, who have recovered and discharged, to donate plasma: Delhi CM Arvind Kejriwal #COVID19 https://t.co/5e7SImyRF6
— ANI (@ANI) April 26, 2020
ದೆಹಲಿಯಲ್ಲಿ ಮಾತನಾಡಿರುವ ಅವರು, ಕೊರೊನಾ ವಿರುದ್ಧ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಹೊಸ ಆಯುಧ, ರಕ್ತಕ್ಕೆ ಯಾವುದೇ ಧರ್ಮ ಬೇಧವಿಲ್ಲ, ಹಿಂದೂ ರಕ್ತ ಮುಸ್ಲಿಂರನ್ನು, ಮುಸ್ಲಿಂ ರಕ್ತ ಹಿಂದೂಗಳನ್ನು ಉಳಿಸವುದು, ಪೂರ್ವಾಗ್ರಹ ಪೀಡಿತರಾಗದೆ ಪ್ಲಾಸ್ಮಾ ದಾನ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.
ನಾವೇಲ್ಲರೂ ಕೊರೊನಾ ಸಂಕಷ್ಟದಿಂದ ಹೊರ ಬಂದು ಬದುಕಲು ಪ್ರಯತ್ನಿಸುತ್ತೇವೆ. ಗುಣಮುಖರಾದ ವ್ಯಕ್ತಿಗಳು ಪ್ಲಾಸ್ಮಾ ದಾನ ಮಾಡಬೇಕು. ನೀವು ನೀಡುವ ಪ್ಲಾಸ್ಮಾ ಹಿಂದೂ, ಮುಸ್ಲಿಂ ಯಾರ ಜೀವ ಉಳಿಸಬಹುದು ಎಂದು ಯಾರೂ ಊಹಿಸಲು ಸಾಧ್ಯವಿಲ್ಲ, ನಾವು ಜೀವ ಉಳಿಸುವ ಕೆಲಸ ಮಾಡಬೇಕು ಎಂದರು.
ಕೊರೊನಾ ಸೋಂಕಿತ ವ್ಯಕ್ತಿಗಳಲ್ಲಿ ಪ್ಲಾಸ್ಮಾ ಥೆರಪಿ ಬಳಿಕ ಚೇತರಿಕೆ ಕಂಡು ಬಂದಿದ್ದು, ದೆಹಲಿಯಲ್ಲಿ ಹಲವು ರೋಗಿಗಳು ಗುಣ ಮುಖರಾಗಿದ್ದಾರೆ. ಈ ಹಿನ್ನಲೆ ಕೊರೊನಾದಿಂದ ಗುಣಮುಖರಾದ ಜನರಿಗೆ ಪ್ಲಾಸ್ಮಾ ದಾನ ಮಾಡಲು ಕೋರಿದ್ದಾರೆ.
ಪ್ಲಾಸ್ಮಾ ಥೆರಪಿ ಎಂದರೇನು?
ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆ್ಯಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.
ಸೋಂಕ ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದೆ. ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.