ಹಾಸನ: ಕೇಸ್ ಇಲ್ಲ, ಲಾಠಿ ರುಚಿಯಿಲ್ಲ, ಪ್ರೀತಿಯಿಂದಲೇ ಹಾಸನದ ಎಸ್ಪಿ ಶ್ರೀನಿವಾಸ್ ಗೌಡ ಜನರ ಮನ ಗೆದ್ದಿದ್ದಾರೆ.
ಲಾಕ್ಡೌನ್ ಉಲ್ಲಂಘಿಸಿ ನಗರದ ಮೈದಾನದಲ್ಲಿ ಗುಂಪು ಗುಂಪಾಗಿ ಜನರು ವಾಕ್ ಮಾಡುತ್ತಿದ್ದಾರೆ. ಎಷ್ಟು ತಿಳಿ ಹೇಳಿದರೂ ಹಾಸನದ ಜನ ಬೆಳಗ್ಗೆ ಮೈದಾನಕ್ಕೆ ತೆರಳಿ ವಾಕ್ ಮಾಡುವುದನ್ನು ಮಾತ್ರ ನಿಲ್ಲಿಸಿರಲಿಲ್ಲ. ಈ ಬಗ್ಗೆ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಸ್ವತಃ ಕಾರ್ಯಾಚರಣೆಗಿಳಿದ್ದಾರೆ.
ಶ್ರೀನಿವಾಸ್ ಗೌಡ ಅವರು ಇಂದು ತಮ್ಮ ತಂಡದೊಂದಿಗೆ ಮೈದಾನಕ್ಕೆ ತೆರಳಿ ವಾಕ್ ಮಾಡುತ್ತಿದ್ದವರನ್ನು ಪೊಲೀಸ್ ವಾಹನದಲ್ಲಿ ಡಿಆರ್ ಮೈದಾನಕ್ಕೆ ಕರೆ ತಂದಿದ್ದರು. ಅಲ್ಲಿಗೆ ಒಬ್ಬರು ಯೋಗ ಗುರುಗಳನ್ನು ಕರೆಸಿ ಮನೆಯಲ್ಲೇ ಮಾಡಬಹುದಾದ ಸರಳ ವ್ಯಾಯಾಮ ಮತ್ತು ಯೋಗಾಸನಗಳ ಬಗ್ಗೆ ತಿಳಿಸಿಕೊಟಿದ್ದಾರೆ.
ಎಸ್ಪಿಯವರೇ ಸ್ವತಃ ಜನರೊಂದಿಗೆ ಕುಳಿತು ಯೋಗ ಮಾಡಿದ್ದಲ್ಲದೆ, ಇನ್ನು ಮುಂದೆ ಮನೆಯಲ್ಲೇ ಇದ್ದು ವ್ಯಾಯಾಮ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪೊಲೀಸರು ಅಂದ್ರೆ ಭಯದಿಂದ ನೋಡುತ್ತಿದ್ದ ಜನ, ಹಾಸನ ಎಸ್ಪಿಯವರ ಸರಳ ನಡತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.