ಕಲಬುರಗಿ: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಕಲಬುರಗಿ ನಗರದ ವಾರ್ಡ್ ನಂಬರ್ 30ರ ಜೊತೆ 14ಅನ್ನು ಕೂಡ ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಿ ಎರಡು ವಾರ್ಡ್ ಗಳಲ್ಲಿ ಸ್ಯಾನಿಟೇಷನ್ ಮಾಡಲಾಗಿದೆ.
ಕೋವಿಡ್-19 ಪರೀಕ್ಷೆಗೆ ನವದೆಹಲಿಯಿಂದ ಈಗಾಗಲೇ ರಿ-ಏಜೆಂಟ್ ಬಂದಿದ್ದು, ಮಾರ್ಚ್ 21ರಿಂದ ಪ್ರಯೋಗಾಲಯ ಆರಂಭವಾಗಲಿದೆ. ಮಹಾರಾಷ್ಟ್ರದಲ್ಲಿ ಹೆಚ್ಚಿನ ಕೊರೊನಾ ಸೋಂಕು ಕಂಡು ಬಂದಿರುವುದರಿಂದ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಹೋಗುವ ಮತ್ತು ಅಲ್ಲಿಂದ ಬರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್ಗಳ ಸೇವೆ ರದ್ದುಗೊಳಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಸುಳ್ಳು ಸುದ್ದಿ ಹರಿಸಿದರೆ ಅಂತವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಸಹಾಯವಾಣಿ ಕೇಂದ್ರಗಳನ್ನು 2ರಿಂದ 4ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಯಾವುದೇ ಆತಂಕ ಇದ್ದಲ್ಲಿ ಸಹಾಯವಾಣಿ ಸಂಖ್ಯೆ: 08472-278648, 278698, 278604, 278677 ನಂಬರಿಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.
ಸಹಾಯವಾಣಿಗೆ ಹುಸಿ ಕರೆ ಮಾಡಿದ್ದವರನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ಸರ್ಕಾರಿ ವ್ಯವಸ್ಥೆಯಲ್ಲಿ 32 ವೆಂಟಿಲೇಟರ್ ಲಭ್ಯವಿದ್ದು, ಜಿಮ್ಸ್ ಮತ್ತು ಇ.ಎಸ್.ಐ.ಸಿ.ಯ ಐಸೋಲೇಷನ್ ವಾರ್ಡ್ ನಲ್ಲಿ ತಲಾ 2 ವೆಂಟಿಲೇಟರ್ ಗಳು ಕೊರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ವೆಂಟಿಲೇಟರ್ ಗಳನ್ನು ತರಿಸಲಾಗುವುದು ಎಂದು ಡಿಸಿ ಮಾಹಿತಿ ನೀಡಿದ್ದಾರೆ.