– ಪೊಲೀಸರಿಗೆ ಕರೆ ಮಾಡಿ ಮಕ್ಕಳನ್ನು ಕೊಂದೆ ಎಂದ
– ಆರ್ಥಿಕ ಸಮಸ್ಯೆಯಿಂದ ಕೊಲೆ ಮಾಡಿ ಸೂಸೈಡ್
ಲಕ್ನೋ: ಆರ್ಥಿಕ ಸಮಸ್ಯೆಯಿಂದ ಬೇಸತ್ತ ದಂಪತಿ ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.
ಚೇತನ್, ಋತು, ಹರ್ಷ್ ಹಾಗೂ ಗುಣ್ಗುಣ್ ಮೃತ ದುರ್ದೈವಿಗಳು. ಚೇತನ್ ಹಾಗೂ ಋತು ತಮ್ಮ ಮಕ್ಕಳ ಊಟದಲ್ಲಿ ನಿದ್ದೆ ಮಾತ್ರೆ ಹಾಕಿದ್ದರು. ಈ ವೇಳೆ ಇಬ್ಬರು ಪ್ರಜ್ಞೆ ತಪ್ಪಿದ್ದಾಗ ದಂಪತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ಮಕ್ಕಳನ್ನು ಕೊಲೆ ಮಾಡಿದ ಬಳಿಕ ಚೇತನ್ ಪೊಲೀಸರಿಗೆ ಕರೆ ಮಾಡಿದ್ದಾರೆ. ಕರೆ ಮಾಡಿ ನಾನು ನನ್ನ ಇಬ್ಬರು ಮಕ್ಕಳನ್ನು ಕೊಂದಿದ್ದೇನೆ. ಈಗ ನಾನು ಹಾಗೂ ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ ಅಷ್ಟರಲ್ಲಿ ನಾಲ್ವರು ಮೃತಪಟ್ಟಿದ್ದರು.
ಐಜಿ ವಿಜಯ್ ಸಿಂಗ್ ಮೀಣಾ ವಿಧಿವಿಜ್ಞಾನ ಪ್ರಯೋಗಾಲಯ ತಂಡದ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಕ್ಕಳ ಮೃತದೇಹ ಒಂದು ರೂಮಿನಲ್ಲಿ ಪತ್ತೆಯಾದರೆ, ಮತ್ತೊಂದು ರೂಮಿನಲ್ಲಿ ದಂಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ಸ್ಥಳದಲ್ಲಿ ಸೂಸೈಡ್ ನೋಟ್ ಪತ್ತೆಯಾಗಿತ್ತು.
ಈ ಬಗ್ಗೆ ಐಜಿ ವಿಯಯ್ ಪ್ರತಿಕ್ರಿಯಿಸಿ, ದಂಪತಿ ಮಕ್ಕಳ ಊಟದಲ್ಲಿ ನಿದ್ದೆ ಮಾತ್ರೆ ಹಾಕಿ ಪ್ರಜ್ಞೆ ತಪ್ಪಿದ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ ಪತಿ-ಪತ್ನಿ ಜಗಳ, ಆರ್ಥಿಕ ಖಿನ್ನತೆ ಸೇರಿದಂತೆ ಹಲವು ಕಾರಣಗಳನ್ನು ಬರೆದಿದ್ದಾರೆ.