ಹಾವೇರಿ: ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕದರಮಂಡಲಗಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನ ಮಲ್ಲಯ್ಯ ಭಜ್ಜಿ (28) ಮತ್ತು ಜ್ಯೋತಿ ಭಜ್ಜಿ(25) ಎಂದು ಗುರುತಿಸಲಾಗಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ದಂಪತಿ ಎರಡು ತಿಂಗಳ ಹಿಂದೆಷ್ಟೇ ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ.
ದಂಪತಿ ಬೈಕಿನಲ್ಲಿ ಕದರಮಂಡಲಗಿ ದೇವಸ್ಥಾನಕ್ಕೆ ಹೋಗಿ ಮರಳಿ ನೂಕಾಪುರ ಗ್ರಾಮದ ಕಡೆಯಿಂದ ರಾಣೇಬೆನ್ನೂರು ನಗರದತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸ್ವಿಫ್ಟ್ ಕಾರು ಕದರಮಂಡಲಗಿ ಕ್ರಾಸ್ ಬಳಿ ವೇಗವಾಗಿ ಬಂದು ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಘಟನೆ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಅಪಘಾತ ಮಾಡಿದ ಕಾರಿನ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.