ಹುಬ್ಬಳ್ಳಿ: ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಏಳು ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಕೊಲೆ ಮಾಡಿರುವ (Honour Killing) ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದೆ.
ಇನಾಂವೀರಾಪುರ ಗ್ರಾಮದ ಮಾನ್ಯಾ (19) ಹತ್ಯೆಯಾದ ಯುವತಿ. ಈಕೆ ಅದೇ ಗ್ರಾಮದ ವಿವೇಕಾನಂದ ಎಂಬವನನ್ನು ಪ್ರೀತಿಸಿ (Love) ಮದುವೆಯಾಗಿದ್ದಳು. ಯುವಕ ಅನ್ಯಜಾತಿಯವನು ಎಂಬ ಕಾರಣಕ್ಕೆ ಆಕೆಯ ತಂದೆ ಪ್ರಕಾಶಗೌಡ ಮನೆಗೆ ನುಗ್ಗಿ, ಗರ್ಭಿಣಿ ಎಂಬುದನ್ನೂ ನೋಡದೇ ಪೈಪ್ ಮತ್ತು ಗುದ್ದಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಮತ್ತಿಬ್ಬರಿಗೂ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಕಲಬುರಗಿಯಲ್ಲಿ ಮರ್ಯಾದಾ ಹತ್ಯೆ | ಅನ್ಯಜಾತಿ ಯುವಕನೊಂದಿಗೆ ಲವ್ – ಮಗಳನ್ನು ಕೊಂದು ಸುಟ್ಟುಹಾಕಿದ ತಂದೆ
ಮಾನ್ಯಾ ಮತ್ತು ವಿವೇಕಾನಂದ ಇಬ್ಬರೂ ಹುಬ್ಬಳ್ಳಿ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಗ ಇನ್ಸ್ಟಾಗ್ರಾಂ ಮೆಸೆಜ್ನಿಂದ ಪ್ರೀತಿ ಹುಟ್ಟಿತ್ತು. ಈ ವಿಚಾರ ಎರಡೂ ಕುಟುಂಬಕ್ಕೂ ತಿಳಿದಿತ್ತು. ಇಬ್ಬರ ಪ್ರೀತಿಗೆ ಯುವತಿಯ ಕುಟುಂಬಸ್ಥರು ವಿರೋಧಿಸಿದ್ದರು. ಯುವತಿ ಯಾವುದೇ ಕಾರಣಕ್ಕೂ ವಿವೇಕಾನಂದನನ್ನು ಬಿಟ್ಟು ಬದುಕೋದಿಲ್ಲ ಅಂತ ಹಠ ಹಿಡಿದಿದ್ದಳಂತೆ. ಧಾರವಾಡದಲ್ಲಿ ಕೋಚಿಂಗ್ಗೆ ಹೋಗಿದ್ದ ವಿವೇಕಾನಂದ ಬಳಿ ಹೋಗಿ ಮದುವೆಯಾಗದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದಳಂತೆ. ಹೀಗಾಗಿ ವಿವೇಕಾನಂದ ಮಾನ್ಯಾಳ ಜೊತೆ ಕಳೆದ ಜೂ.19 ರಂದು ಹುಬ್ಬಳ್ಳಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದ. ಈ ಸಮಯದಲ್ಲಿ ಪೊಲೀಸರು ಎರಡು ಕುಟುಂಬ ಕರೆದು ರಾಜಿ ಪಂಚಾಯತಿ ಮಾಡಿದ್ದರಂತೆ.
ಮಾನ್ಯಾ ಮತ್ತು ವಿವೇಕಾನಂದ ಊರು ಬಿಟ್ಟು ಹೋಗಿ ಹಾವೇರಿಯಲ್ಲಿ ವಾಸವಾಗಿದ್ದರು. ಈ ನಡುವೆ ಮಾನ್ಯಾ ಗರ್ಭಿಣಿಯಾಗಿದ್ದು, ಮಾನ್ಯ ಹೆತ್ತವರು ಇಬ್ಬರನ್ನು ಕೊಲೆ ಮಾಡಲು ಮುಂದಾಗಿದ್ದರಂತೆ. ಹೀಗಾಗಿ ಮಾನ್ಯ ಮತ್ತು ವಿವೇಕಾನಂದ ಡಿಸೆಂಬರ್ 8 ರಂದು ಸ್ವ ಗ್ರಾಮಕ್ಕೆ ಹಿಂತಿರುಗಿದ್ದರು. ಈ ಸಮಯದಲ್ಲಿ ಕೂಡಾ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಎರಡು ಕಡೆಯವರನ್ನು ಕರೆಸಿ, ರಾಜಿ ಮಾಡಿಸಿದ್ದರಂತೆ. ಆದರೆ ಡಿ.21ರ ಸಂಜೆ ಮತ್ತೆ ವಿವೇಕಾನಂದ ಮನೆ ಮೇಲೆ ದಾಳಿ ಮಾಡಿದ ಪ್ರಕಾಶಗೌಡ ಪಾಟೀಲ್ ಮತ್ತು ಸಂಬಂಧಿಗಳು ಮಾನ್ಯಾ ಮತ್ತು ಮನೆಯಲ್ಲಿದ್ದ ಆಕೆಯ ಅತ್ತೆ ಸೇರಿದಂತೆ ಮೂವರ ಮೇಲೆ ಪೈಪ್ ಮತ್ತು ಗುದ್ದಲಿಯಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಮಾನ್ಯಾಳನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಮಾನ್ಯಾಳ ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಧಾರವಾಡ ಎಸ್ಪಿ ಗುಂಜನ್ ಆರ್ಯ, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ – ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದಳೆಂದು ತಂದೆಯಿಂದಲೇ ಮಗಳ ಕೊಲೆ

