ಚಿಕ್ಕಮಗಳೂರು: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ (Accident) ಬೈಕಿನಿಂದ ಕೆಳಗೆ ಸವಾರರ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು (Kadur) ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ನಡೆದಿದೆ.
ಮೃತರನ್ನ ಮೂಲತಃ ರಾಜಸ್ಥಾನ ಮೂಲದವರೆಂದು ಗುರುತಿಸಲಾಗಿದೆ. ಆದರೆ, ನಿಖರವಾಗಿ ಅವರ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಪೊಲೀಸರು ಅವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಡೂರಿನಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಮತ್ತೊಂದು ಬೈಕ್ ನಡುವೆ ಹಳೇಹಟ್ಟಿ ಗೇಟ್ ಬಳಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಇಬ್ಬರು ಸವಾರರು ರಸ್ತೆಯ ಮೇಲೆಯೇ ಬಿದ್ದಿದ್ದಾರೆ. ಬೈಕ್ ಸವಾರರು ರಸ್ತೆ ಮೇಲೆ ಬಿದ್ದ ತಕ್ಷಣ ಹಿಂದಿನಿಂದ ವೇಗವಾಗಿ ಬಂದ ಸರ್ಕಾರಿ ಬಸ್ ಅವರ ಮೇಲೆಯೇ ಹರಿದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕಡವೆ ತಪ್ಪಿಸಲು ಹೋಗಿ ಕಾರು ಅಪಘಾತ – ಡಿಕ್ಕಿಯ ರಭಸಕ್ಕೆ ತುಂಡಾಗಿ ಬಿದ್ದ ವಿದ್ಯುತ್ ಕಂಬ
ಘಟನೆಯಲ್ಲಿ ಮತ್ತೊಂದು ಬೈಕ್ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಖರಾಯಪಟ್ಟಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲಾರಿ ಪಲ್ಟಿಯಾಗಿ ರಸ್ತೆ ತುಂಬಾ ಚೆಲ್ಲಾಡಿದ ಈರುಳ್ಳಿ, ಬೆಳ್ಳುಳ್ಳಿ – ಕಳುವಾಗದಂತೆ ಪೊಲೀಸರಿಂದ ಭದ್ರತೆ

