ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಸಿಡಬ್ಲೂಸಿ ಸಭೆಯಲ್ಲಿ ರಾಜೀನಾಮೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಲೋಕಸಭಾ ಚುನಾವಣೆಯ ಬಳಿಕ ಮೊದಲ ಬಾರಿಗೆ ಪಕ್ಷದ ಸಭೆ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು, ದೇಶದ ಎಲ್ಲಾ ರಾಜ್ಯಗಳ ನಾಯಕರು ಕೂಡ ಸಭೆಗೆ ಹಾಜರಾಗಿದ್ದು, ಈ ಸಭೆಯ ಆರಂಭದಲ್ಲೇ ರಾಹುಲ್ ಈ ಬಗ್ಗೆ ಪ್ರಸ್ತಾಪ ಮಾಡಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಲು ಕಾರಣವೇನು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಹುಲ್ ಅವರ ರಾಜೀನಾಮೆಗೆ ಸಭೆಯಲ್ಲಿ ಯಾವುದೇ ನಾಯಕರು ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ರಾಹುಲ್ ಅವರ ನಾಯಕತ್ವದಲ್ಲೇ ಪಕ್ಷವನ್ನು ಮುನ್ನಡೆಸುವ ಮೂಲಕ ಬಲಿಷ್ಠಗೊಳಿಸುವ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಭಾಗಿಯಾಗಿದ್ದ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ಮನಮೋಹನ್ ಸಿಂಗ್ ಅವರು ರಾಹುಲ್ ಅವರ ಮನವೊಲಿಕೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.
2014ರಲ್ಲಿ ಕೇವಲ 44 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ ಸದ್ಯ 52 ಸ್ಥಾನಗಳನ್ನು ಪಡೆದಿದೆ. ಈ ಬಾರಿಯೂ ಕಾಂಗ್ರೆಸ್ ಪಕ್ಷ ವಿರೋಧಿ ಪಕ್ಷ ಸ್ಥಾನ ಪಡೆಯಲು ಬೇಕಾದ ಸಂಖ್ಯೆಯನ್ನು ಪಡೆದಿಲ್ಲ. ಅಲ್ಲದೇ ದೇಶದ ಪ್ರಮುಖ 17 ರಾಜ್ಯಗಳಲ್ಲಿ ಖಾತೆ ತೆರೆಯಲು ವಿಫಲವಾಗಿದ್ದರೆ, ಮತ್ತು ಕೆಲ ರಾಜ್ಯದಲ್ಲಿ 1 ಮತ್ತು 2 ಸ್ಥಾನಗಳಿಗೆ ಸಿಮೀತವಾಗಿತ್ತು. ಸ್ವತಃ ರಾಹುಲ್ ಗಾಂಧಿ ಅವರೇ ಅವರು ಅಮೇಥಿ ಕ್ಷೇತ್ರದಲ್ಲಿ ಸೋಲುಂಡು ಮುಖಭಂಗ ಅನುಭವಿಸಿದ್ದರು. ಅಲ್ಲದೇ ಸೋನಿಯಾ ಗಾಂಧಿ ಮಾತ್ರ ರಾಯ್ಬರೇಲಿ ಮಾತ್ರ ಗೆಲುವು ಪಡೆದಿದ್ದರು.
ಈಗಾಗಲೇ ಕಾಂಗ್ರೆಸ್ ಪಕ್ಷದ 3 ರಾಜ್ಯಾಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್ ಮೇಲಿನ ಒತ್ತಡ ಹೆಚ್ಚಾಗಲು ಕಾರಣರಾಗಿದೆ. ಇತ್ತ ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರು ಕೂಡ ರಾಜೀನಾಮೆಗೆ ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ಅವರೇ ಸಿಎಂ ಅವರಿಗೆ ಕರೆ ಮಾಡಿ ರಾಜೀನಾಮೆ ನೀಡದಂತೆ ಮನವೊಲಿಸಿದ್ದರು.