ಬೆಂಗಳೂರು: ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗಲಿದೆ. ಕಷ್ಟ ಕಾಲದಲ್ಲಿ ಅವರ ಪಾಲಿನ ನೀರನ್ನು ಬಿಡಲು ಈ ಯೋಜನೆ ನೆರವಾಗಲಿದೆ. ಹೀಗಾಗಿ, ಸುಪ್ರೀಂ ಕೋರ್ಟಿನ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೆರಿಗೂ ಸಂದ ಜಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರಿನ ಬಳಕೆಗಾಗಿ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ಮೇಕೆದಾಟಿನಿಂದ ಹೆಜ್ಜೆ ಹಾಕಿ ನಾವು ಹೋರಾಟ ಮಾಡಿದೆವು. ನಂತರ ರಾಜ್ಯದ ಜನ ನಮ್ಮ ಕೈಗೆ ಅಧಿಕಾರ ನೀಡಿದರು. ನಾವು ಅಧಿಕಾರಕ್ಕೆ ಬಂದ ನಂತರ ಕಾನೂನು ಹೋರಾಟ ಮಾಡಿದೆವು. ಈ ವೇಳೆ ವಿರೋಧ ಪಕ್ಷಗಳು ಅನೇಕ ವ್ಯಾಖ್ಯಾನ ಮಾಡಿದವು. ತಮಿಳುನಾಡಿನವರು ಈ ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ಬೇಗ ತೀರ್ಮಾನವಾಗಬೇಕು ಎಂದು ನಾವು ಕಾನೂನು ಒತ್ತಡ ಹಾಕಿದೆವು. ಅದರಂತೆ ಸುಪ್ರೀಂ ಕೋರ್ಟಿನ ವಿಶೇಷ ಪೀಠ ವಿಚಾರಣೆ ನಡೆಸಿ, ಇಂದು ತೀರ್ಪು ಪ್ರಕಟಿಸಿದೆ ಎಂದರು.
ಈ ವಿಚಾರ ನ್ಯಾಯಾಲಯದಲ್ಲಿ ತೀರ್ಮಾನ ಮಾಡುವ ವಿಚಾರವಲ್ಲ. ಕರ್ನಾಟಕ ರಾಜ್ಯವು ತಮಿಳುನಾಡಿನ ಪಾಲಿನ 177 ಟಿಎಂಸಿ ನೀರು ಬಿಡಲೇಬೇಕು ಎಂದು ನಿರ್ದೇಶನ ನೀಡಿ, ತಮಿಳುನಾಡಿನ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಸುಪ್ರೀಂ ಕೋರ್ಟಿನ ಮಾರ್ಗದರ್ಶನಕ್ಕೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದ ನೆಲದಲ್ಲಿ ಅಣೆಕಟ್ಟು ನಿರ್ಮಿಸುವ ನಮ್ಮ ಯೋಜನೆಯನ್ನು ಮುಂದುವರಿಸುತ್ತೇವೆ. ಈ ಯೋಜನೆ ಸಂಬಂಧ ಎಲ್ಲಾ ತೀರ್ಮಾನಗಳನ್ನು ಕೇಂದ್ರ ಜಲ ಆಯೋಗ (ಸಿಡ್ಬ್ಲ್ಯೂಸಿ) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಹೀಗಾಗಿ ಈ ವಿಚಾರವಾಗಿ ಮತ್ತೆ ನ್ಯಾಯಾಲಯದ ಮುಂದೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ. ಇನ್ನು ಕಾನೂನು ಚೌಕಟ್ಟಿನಲ್ಲಿ ಈ ಯೋಜನೆಗೆ ಅಗತ್ಯ ಇಲಾಖೆಗಳಿಂದ ಅನುಮತಿ ಪಡೆಯಲಾಗುವುದು ಎಂದು ತಿಳಿಸಿದರು.
ನಾವು ಈಗಾಗಲೇ ಮೇಕೆದಾಟು ಕಚೇರಿಯನ್ನು ಹಾರೋಬೆಲೆಯಲ್ಲಿ ಪ್ರಾರಂಭಿಸಿದ್ದೇವೆ. ಈ ಯೋಜನೆಗೆ ಅಗತ್ಯವಿರುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಕಂದಾಯ ಭೂಮಿಯನ್ನು ನೀಡಲು ಸ್ಥಳ ಗುರುತಿಸಲಾಗಿದೆ. ನಾವು ತಮಿಳುನಾಡಿಗೆ ಪ್ರತಿ ವರ್ಷ 177 ಟಿಎಂಸಿ ನೀರನ್ನು ಹರಿಸಬೇಕು. ಈ ವರ್ಷ ನ.13 ರ ವೇಳೆಗೆ 148 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ಈವರೆಗೆ ನಾವು 299 ಟಿಎಂಸಿ ನೀರು ಹರಿಸಿದ್ದೇವೆ. ವಾಡಿಕೆಗಿಂತ ಎರಡು ಪಟ್ಟು. ಹೆಚ್ಚುವರಿ ನೀರು ಸಮುದ್ರ ಪಾಲಾಗಿದೆ. ತಮಿಳುನಾಡಿಗೂ ಬಳಸಿಕೊಳ್ಳಲು ಆಗಿಲ್ಲ. ನಾವು ಈ ಎಲ್ಲಾ ಮಾಹಿತಿಗಳನ್ನು ನ್ಯಾಯಾಲಗಳ ಮುಂದೆ ಇಟ್ಟಿದ್ದೆವು. ಇದೇ ಕಾರಣಕ್ಕೆ ಕಳೆದ ವಾರ ನಾನು ದೆಹಲಿಗೆ ಹೋಗಿ, ನಮ್ಮ ಕಾನೂನು ತಂಡದ ಜೊತೆ ಚರ್ಚೆ ಮಾಡಿ, ನಮ್ಮ ನಿಲುವು ಸ್ಪಷ್ಟಪಡಿಸಿದ್ದೆ. ನಮ್ಮ ಕಾನೂನು ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲ ನಾಗರಿಕರನ್ನು ಅಭಿನಂದಿಸುತ್ತೇನೆ ಎಂದರು.
ಸಂಸತ್ ಅಧಿವೇಶನ ಆರಂಭವಾದ ಬಳಿಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಜಲಶಕ್ತಿ ಸಚಿವರ ಭೇಟಿ ಹಾಗೂ ಪ್ರಧಾನಮಂತ್ರಿಗಳ ಭೇಟಿಗೆ ರಾಜ್ಯದ ಸಂಸದರನ್ನು ಒಳಗೊಂಡ ಮಾಡಿ ನಿಯೋಗವನ್ನು ಕರೆದುಕೊಂಡು ಹೋಗಲು ಪ್ರಯತ್ನಿಸುತ್ತೇನೆ. ನ್ಯಾಯಾಲಯದ ಈ ತೀರ್ಮಾನದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಎಲ್ಲರೂ ಸಂತೋಷ ವ್ಯಕ್ತಪಡಿಸಿದ್ದಾರೆ. ಇಲ್ಲಿ ಯಾವುದೇ ದ್ವೇಷದ ಮನೋಭಾವವಿಲ್ಲ. ತಮಿಳುನಾಡಿನ ಪಾಲಿನ ನೀರನ್ನು ನಾವು ಹರಿಸುತ್ತೇವೆ. ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ, ಅವರಿಗೆ ಅಗತ್ಯ ಗೌರವ ನೀಡುತ್ತೇವೆ ಎಂದು ಈ ಸಂದರ್ಭದಲ್ಲಿ ತಮಿಳುನಾಡಿಗೆ ಮನವಿ ಮಾಡುತ್ತೇನೆ. ನ್ಯಾಯ ಪೀಠದಿಂದ ನ್ಯಾಯ ಸಿಕ್ಕಂತಾಗಿದೆ. ಮೇಕೆದಾಟು, ನಮ್ಮ ನೀರು ನಮ್ಮ ಹಕ್ಕಿನ ಯೋಜನೆ. ನಾವು ತಮಿಳುನಾಡಿಗೆ ಅಡ್ಡಿ ಮಾಡುತ್ತಿಲ್ಲ. ರಾಜ್ಯದ ಜನರ ಪ್ರಾರ್ಥನೆ, ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ. ನಾವು ತಮಿಳುನಾಡಿನ ಪಾಲಿನ ನೀರನ್ನು ಬಿಡದಿದ್ದರೆ, ಆಗ ನ್ಯಾಯಾಂಗ ನಿದನೆಯಾಗಲಿದೆ ಎಂದು ನ್ಯಾಯಾಲಯವು ತಮ್ಮ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಎಷ್ಟೇ ಕಷ್ಟವಾದರೂ ನಾವು ನೀರನ್ನು ಬಿಡಲೇಬೇಕು. ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.
ಈ ಯೋಜನೆ ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ಯಾವಾಗಲೇ ನೀರಿನ ಕೊರತೆ ಉಂಟಾದರೂ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟು ನೆರವಾಗಲಿದೆ. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಈಗಲಾದರೂ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿ ಮಾಡುತ್ತೇನೆ. ನಾವೆಲ್ಲರೂ ಮಾನವೀಯತೆ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡೋಣ. ಸಿಡಬ್ಲ್ಯೂಸಿ ಈ ಯೋಜನೆಗೆ ಸಹಕಾರ ನೀಡುವುದು ಈ ಯೋಜನೆಗೆ ಅನುಮತಿ ನೀಡದೇ ಬೇರೆ ಆಯ್ಕೆ ಅವರ ಮುಂದೆ ಇಲ್ಲ. ಅವರು ನ್ಯಾಯ ಒದಗಿಸಿಕೊಡಲೇಬೇಕು ಎಂದರು.

