ಬೆಲೆ ಏರಿಕೆ ಪಟ್ಟಿ ನೋಡಿದ್ರೆ ಎದೆ ನಡುಗುತ್ತೆ – ಹೆಚ್‌.ಡಿ ಕುಮಾರಸ್ವಾಮಿ

Public TV
4 Min Read
HDK

– ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು
– ಇವೇ ಕಾಂಗ್ರೆಸ್‌ ಪಕ್ಷದ ಹೊಸ ಗ್ಯಾರಂಟಿ ಅಂತಾ ಹೆಚ್‌ಡಿಕೆ ಟಾಂಗ್‌

ಬೆಂಗಳೂರು: ಬೆಲೆ ಏರಿಕೆ (Price Hike) ಪಟ್ಟಿ ನೋಡಿದ್ರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ 20 ರೂ. ಹೆಚ್ಚಿದರೆ, ಟೊಮ್ಯಾಟೋ ಬೆಲೆ 100 ರೂ. ತಲುಪಿದೆ. ಈ ಬೆಲೆ ಏರಿಕೆಯಿಂದಾಗಿ ಅತ್ತ ರೈತನಿಗೂ ಲಾಭ ಇಲ್ಲ, ಇತ್ತ ಗ್ರಾಹಕನಿಗೂ ಲಾಭವಿಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ. ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸೊಪ್ಪು ತರಕಾರಿ ಸೇರಿದಂತೆ ಆಹಾರ ಪದಾರ್ಥಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯು ಜನ ಸಾಮ್ಯಾನರಿಗೆ ಶಾಕ್‌ ಕೊಟ್ಟಂತಾಗಿದೆ. ಈ ಕುರಿತು ಮಾಜಿ ಸಿಎಂ ಹೆಚ್‌ಡಿಕೆ ಸರಣಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್‌ಡಿಕೆ ಟ್ವೀಟ್‌ನಲ್ಲಿ ಏನಿದೆ?
5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರ (Congress Government) ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ.

ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ.

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರ್ಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆಗಳ ಬಗ್ಗೆ, ಆಹಾರ ಪದಾರ್ಥಗಳ ದುಬಾರಿ ಬಗ್ಗೆ ಗಮನ ಹೋಗಲೇ ಇಲ್ಲ. ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ. ಇದನ್ನೂ ಓದಿ: ತರಕಾರಿ, ಹಣ್ಣುಗಳ ಬೆಲೆ ಏರಿಕೆ – ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ 20ರೂ. ಏರಿದ್ದರೆ,ಕೆಜಿ ಟೊಮ್ಯಾಟೋ ಬೆಲೆ 100 ರೂ. ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ, ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ತಾನು ಕೊಟ್ಟ ಭರವಸೆಗಳ ಬಗ್ಗೆ ಉತ್ತರ ಹೇಳಲಿ? ಬೆಲೆಗಳ ಇಳಿಕೆಯ ಬಗ್ಗೆ ಹೇಳಿದ್ದೆಲ್ಲ ಎಲ್ಲಿ ಹೋಯಿತು? ಮತ ಪಡೆದ ಮೇಲೆ ಎಲ್ಲಾ ಮರೆತು ಹೋಯಿತಾ? 135 ಸೀಟು ಸಿಕ್ಕಿದ ಮೇಲೆ ಪ್ರಣಾಳಿಕೆ ಪುಸ್ತಕಕ್ಕೆ ಮೂವತ್ತೇ ದಿನದಲ್ಲಿ ಗೆದ್ದಲು ಹಿಡಿಯಿತಾ?

ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ?

ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು: ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು, ಗೃಹಜ್ಯೋತಿ ಈಗ ಸುಡುಜ್ಯೋತಿ, ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ, ಗೃಹಲಕ್ಷ್ಮಿಗೆ ಗ್ರಹಣ ಹಾಗೂ ನಿದ್ರೆಗೆ ಜಾರಿದೆ ಯುವನಿಧಿ ಇವು ಕಾಂಗ್ರೆಸ್‌ ಪಕ್ಷದ ಹೊಸ ಗ್ಯಾರಂಟಿಗಳು. ಇದನ್ನೂ ಓದಿ: ಬೆಸ್ಕಾಂ ಎಡವಟ್ಟು, ಮೀಟರ್ ರಿಡೀಂಗ್‌ಗಿಂತ ಹೆಚ್ಚು ಬಿಲ್ – ಜನರ ಜೇಬಿಗೆ ಕತ್ತರಿ

ಕಾಂಗ್ರೆಸ್‌ ಸರ್ಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ ಎಂದು ಎಚ್ಚರಿಸಿದ್ದಾರೆ.

Share This Article