ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಮೂಡಬಿದ್ರೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸರಳ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಹಾಲಿ ಜಿಲ್ಲಾಧ್ಯಕ್ಷರಾಗಿದ್ದ ಪುತ್ತೂರು ಶಾಸಕ ಸಂಜೀವ್ ಮಠಂದೂರು ಅವರ ಅವಧಿಯು 2019ರ ಸೆಪ್ಟೆಂಬರ್ ತಿಂಗಳಲ್ಲಿ ಮುಗಿದಿತ್ತು. ಜೊತೆಗೆ ಅವರು ಶಾಸಕರಾಗಿ ಆಯ್ಕೆಯಾಗಿದ್ದರಿಂದ ಪಕ್ಷ ಅಧ್ಯಕ್ಷರನ್ನು ಬದಲಾಯಿಸಲು ತೀರ್ಮಾನಿಸಿತ್ತು. ಅದರಂತೆ ಅವಿರೋಧವಾಗಿ ಸುದರ್ಶನ್ ಮೂಡಬಿದ್ರೆಯನ್ನು ಆಯ್ಕೆ ಮಾಡಲಾಗಿದೆ.
ಸುದರ್ಶನ್ ಈ ಹಿಂದೆ ಪಕ್ಷದ ಜಿಲ್ಲಾ ಸಮಿತಿಯಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದು, ಪ್ರಸ್ತುತ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್, ನಿಕಟ ಪೂರ್ವ ಅಧ್ಯಕ್ಷರು ಹಾಗೂ ಪುತ್ತೂರು ಶಾಸಕರಾದ ಸಂಜೀವ್ ಮಠಂದೂರು, ಜಿಲ್ಲಾ ಪ್ರಭಾರಿ ಪ್ರತಾಪ್ ಸಿಂಹ ನಾಯಕ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುದರ್ಶನ್ ಅವರನ್ನು ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಅಭಿನಂದಿಸಿದರು.