– ಭೀಕರ ಅಪಘಾತದಲ್ಲಿ 15 ಜನರಿಗೆ ಗಾಯ
– ಇಬ್ಬರ ಸ್ಥಿತಿ ಚಿಂತಾಜನಕ
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮೈಲುಗಲ್ಲಿಗೆ ದಿಬ್ಬಣದ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಗ್ರಾಮದ ಬಳಿ ನಡೆದಿದೆ.
ಆಂಧ್ರ ಪ್ರದೇಶದ ಇಂದೂಪುರ ನಿವಾಸಿಗಳಾದ ವರಲಕ್ಷ್ಮೀ (40), ಅನುಷಾ (38) ಹಾಗೂ ರತ್ನಮ್ಮ (56) ಮೃತ ದುರ್ದೈವಿಗಳು. ಘಟನೆಯಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಚನ್ನಗಿರಿ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದೆ.
ಇಂದೂಪುರ ಯುವಕನ ಜೊತೆಗೆ ಶಿವಮೊಗ್ಗದ ಯುವತಿಯ ವಿವಾಹ ನಿಶ್ಚಯ ಮಾಡಲಾಗಿತ್ತು. ಹೀಗಾಗಿ ಇಂದು ವಿವಾಹದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಕಡೆಯಿಂದ ಚನ್ನಗಿರಿ ಮಾರ್ಗವಾಗಿ ಶಿವಮೊಗ್ಗಕ್ಕೆ ಕಂಟೇನರ್ ಲಾರಿ ಹೋಗುತ್ತಿತ್ತು. ಮಾವಿನಕಟ್ಟೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿದ್ದ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಲಾರಿಯಲ್ಲಿದ್ದ ಮೂವರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.