– ಯಾವ ಔತಣಕೂಟವೂ ಇಲ್ಲ ಎಂದ ಡಿಸಿಎಂ
ಬೆಳಗಾವಿ: ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟಕ್ಕೆ ಕೊಟ್ಟರೆ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಹೊರವಲಯದಲ್ಲಿ ಗುರುವಾರ (ಡಿ.11) ರಾತ್ರಿ ಶಾಸಕರ ಜೊತೆ ಔತಣಕೂಟ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೆ ಅವರು ಪ್ರೀತಿಯಿಂದ ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: 40ಕ್ಕೂ ಹೆಚ್ಚು ಶಾಸಕರ ಜೊತೆ ಡಿಕೆಶಿ ಡಿನ್ನರ್ ಪಾಲಿಟಿಕ್ಸ್!
ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ನ ಮಾಜಿ ಅಧ್ಯಕ್ಷರು ನನ್ನ ಸ್ನೇಹಿತರೂ ಹೌದು. ಅವರದ್ದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು ಅಷ್ಟೇ. ಅದರಲ್ಲಿ ಯಾವ ಔತಣಕೂಟವು ಇಲ್ಲ, ಏನೂ ಇಲ್ಲ ಎಂದಿದ್ದಾರೆ.
ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಬೆಂಗಳೂರಿನ ಗೌರವ ಉಳಿಸಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಈ ವಿಚಾರದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಜವಾಬ್ದಾರಿಯನ್ನು ಗೃಹ ಸಚಿವ ಪರಮೇಶ್ವರ್ ಅವರಿಗೆ ವಹಿಸಲಾಗಿದೆ. ಕೆಎಸ್ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಕೂತು ಚರ್ಚೆ ಮಾಡಲಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ:ಅಧಿವೇ ಶನ ಮುಗಿದ ಬಳಿಕ ಶ್ರಮಕ್ಕೆ ಫಲ: ಮತ್ತೆ ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

