ವಿಜಯಪುರ: ಉಪಮುಖ್ಯಮಂತ್ರಿ ಹುದ್ದೆ ನನಗೆ ಬಯಸದೇ ಬಂದ ಭಾಗ್ಯ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನನ್ನನ್ನು ಗುರುತಿಸಿ ಪಕ್ಷ ಸಾರಿಗೆ ಇಲಾಖೆ ಜೊತೆಗೆ ಡಿಸಿಎಂ ಹುದ್ದೆ ನೀಡಿದೆ. 2023ರ ವಿಭಾನಸಭಾ ಚುನಾವಣೆಯಲ್ಲಿ ಬಿಜೆಪಿಯು 150 ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ರಾಜ್ಯದ ಜನರ ಅಭಿವೃದ್ಧಿಗೆ ಬಿಜೆಪಿ ಸರ್ಕಾರವು ಶ್ರಮಿಸಲಿದ್ದೇವೆ. ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಇನ್ನೂ ಎರಡು ಅಥವಾ ಮೂರು ಜನರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ತಿಳಿಸಿದರು.
ಮುಂಬರುವ ಉಪಚುನಾವಣೆಯಲ್ಲಿ ಎಲ್ಲ ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ. ಮುಂದಿನ 20 ವರ್ಷ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಿ ಕಲ್ಯಾಣ ಕರ್ನಾಟಕ ಮಾಡುತ್ತೇವೆ. ಉತ್ತರ ಕರ್ನಾಟಕದ ಅಭಿವೃದ್ಧಿ ಉದ್ದೇಶದಿಂದ ನನಗೆ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ನೀಡಲಾಗಿದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಪ್ರವಾಹ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಲಕ್ಷ್ಮಣ ಸವದಿ ಅವರು, ಪ್ರವಾಹದಿಂದ ಸುಮಾರು 30 ಸಾವಿರ ಕೋಟಿ ರೂ. ನಷ್ಟು ಆಸ್ತಿಪಾಸ್ತಿ ಹಾನಿಯಾಗಿದೆ. ಇದು ಪ್ರಾಥಮಿಕ ಅಂದಾಜು ಅಷ್ಟೇ. ಕೇಂದ್ರ ಸರ್ಕಾರದ ತಂಡಗಳು ಈಗಾಗಲೇ ಭೇಟಿ ನೀಡಿ ದೆಹಲಿಗೆ ತೆರಳಿವೆ. ಶೇ.90 ರಷ್ಟು ಪ್ರವಾಹ ಸಂತ್ರಸ್ತರಿಗೆ ಈಗಾಗಲೇ ಪ್ರಾಥಮಿಕ ಹಂತದಲ್ಲಿ ಪರಿಹಾರದ ಹಣ ನೀಡಲಾಗಿದೆ. ಬೆಳೆಹಾನಿ ಸಮೀಕ್ಷೆ ಈಗ ಆರಂಭವಾಗಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಬಿಜೆಪಿ ನಾಯಕರು ಭೇಟಿಯಾಗಿ ಹೆಚ್ಚಿನ ಪರಿಹಾರ ಹಣಕ್ಕೆ ಮನವಿ ಸಲ್ಲಿಸುತ್ತೇವೆ. ಆದರೆ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗುವ ಯೋಚನೆ ಇಲ್ಲ ಎಂದರು.