ಉಡುಪಿ: ಡಿಸೆಂಬರ್ ತಿಂಗಳಲ್ಲಿ ಮೀನುಗಾರಿಕೆಗೆ ಹೊರಟು ಬೋಟ್ ಸಮೇತ ನಾಪತ್ತೆಯಾಗಿದ್ದ ಮೀನುಗಾರರ ಮನೆಗಳಿಗೆ ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಕೊಟ್ಟು, ಅವರ ಕುಟುಂಬಕ್ಕೆ ಸಮಾಧಾನ ಹೇಳಿದ್ದಾರೆ.
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಜೊತೆ ನಿರ್ಮಲಾ ಸೀತಾರಾಮನ್ ಅವರು ಮಲ್ಪೆಯಲ್ಲಿರುವ ಮೀನುಗಾರರ ಮನೆಗೆ ಭೇಟಿ ಕೊಟ್ಟಾಗ ಬಂಧುಗಳ ಕಣ್ಣೀರ ಕಟ್ಟೆ ಒಡೆಯಿತು.
ಮೂರು ತಿಂಗಳ ಹಿಂದೆ ಮೀನುಗಾರಿಕೆಗೆ ತೆರಳಿದ ಮೀನುಗಾರರ ಹುಡುಕಾಟ ಇನ್ನೂ ನಡೆಯುತ್ತಲೇ ಇದೆ. ಕುಟುಂಬಸ್ಥರು ಇವತ್ತು ಬರ್ತಾರೆ ನಾಳೆ ಬರ್ತಾರೆ ಎಂದು ಕಾಯುತ್ತಲೇ ಇದ್ದಾರೆ. ಕಾಣೆಯಾದ ಚಂದ್ರಶೇಖರ, ದಾಮೋದರ ಅವರ ಮನೆಗಳಿಗೆ ಭೇಟಿ ನೀಡಿದಾಗ ಅವರಿಬ್ಬರ ಪತ್ನಿಯರ ಆಕ್ರಂದನ ನೋಡಿ ರಕ್ಷಣಾ ಸಚಿವೆ ಅಸಹಾಯಕರಾದರು.
ಕೊನೆಗೆ ದುಃಖಿತರನ್ನು ಸಮಾಧಾನಪಡಿಸಿ, ನಾಪತ್ತೆಯಾದ ಮೀನುಗಾರರನ್ನು ಆದಷ್ಟು ಬೇಗ ಹುಡುಕಿ ಕೊಡುತ್ತೇವೆ. ಘಟನೆ ನಡೆದ ದಿನದಿಂದ ಮೀನುಗಾರರನ್ನು ಹುಡುಕಲು ಕಾರ್ಯಪ್ರವೃತರಾಗಿದ್ದೇವೆ ಎಂದು ದುಃಖತಪ್ತ ಕುಟುಂಬಕ್ಕೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.