– ಬಿಜೆಪಿಯವರ ಆಟ ಇದೇ ಮೊದಲೇನಲ್ಲ
ನವದೆಹಲಿ: ಬಹಿರಂಗವಾಗಿ ಅಸಮಾಧಾನ ಹೊರಹಾಕಿದರೆ ಹಾಗೂ ಬಂಡಾಯ ಎದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಶಾಸಕರಿಗೆ ಎಚ್ಚರಿಕೆ ರವಾನಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಳಿಕ ಮಾತನಾಡಿದ ವೇಣುಗೋಪಾಲ್ ಅವರು, ರಾಜ್ಯದಲ್ಲಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಎಲ್ಲವೂ ಕೂಲ್ ಆಗಿದೆ. ಬಿಜೆಪಿ ಮೊದಲ ದಿನದಿಂದಲೂ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದೆ. ಯಾವ ಶಾಸಕರೂ ರಾಜೀನಾಮೆ ಕೊಡುವುದಿಲ್ಲ. ಶಾಸಕರು ರಾಜೀನಾಮೆ ಕೊಟ್ಟಿದಾರೆ ಅಂತ ಹೇಳಿದ್ದು ಯಾರು ಎಂದು ಪ್ರಶ್ನಿಸಿದರು.
ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಇಲ್ಲದೇ ಇರುವುದರಿಂದಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿದೇಶಕ್ಕೆ ಹೋಗಿದ್ದಾರೆ. ನಾನು ರಾಜ್ಯ ನಾಯಕರೊಂದಿಗೆ ಮಾತನಾಡಿದ್ದೇನೆ. ಕರ್ನಾಟಕದಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾನು ಬೆಂಗಳೂರಿಗೆ ಹೋಗುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದರು.
ಬಿಜೆಪಿಯವರ ಆಟ ಇದೇ ಮೊದಲೇನಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಅವರು ಸರ್ಕಾರ ಬೀಳಿಸುವ ಪ್ರಯತ್ನ ನಡೆಸಿದ್ದಾರೆ. ನಮ್ಮ ಬಳಿ 20 ಜನ ಶಾಸಕರು ಇದ್ದಾರೆ, 25 ಶಾಸಕರಿದ್ದಾರೆ ಎಂದು ಹೇಳುತ್ತಾ ಬಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ ಎಂದರು.