ಬೆಂಗಳೂರು: ಡೆಂಗ್ಯೂ (Dengue) ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ. ಅಗತ್ಯ ಚಿಕಿತ್ಸೆ, ಚುಚ್ಚುಮದ್ದು ನೀಡಲು ಸೂಕ್ತ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದರು.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಿಎಂ ಚರ್ಚಿಸಿದರು. ಇದನ್ನೂ ಓದಿ: ಪಿಜಿಸಿಇಟಿ ಮುಂದಕ್ಕೆ – ಅರ್ಜಿ ಸಲ್ಲಿಸಲು ಜು.7ರವರೆಗೆ ಅವಕಾಶ
ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಡೆಂಘಿ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಲಹೆ, ಸೂಚನೆ ನೀಡಿದೆ.
ಸಭೆಯ ಮುಖ್ಯಾಂಶಗಳು ಹೀಗಿವೆ.#Dengue #HealthDept #Awareness pic.twitter.com/e1XXKvEnvD
— Siddaramaiah (@siddaramaiah) June 25, 2024
ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗ್ಯೂ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಿ. ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್ಎಸ್ಎಸ್ ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಿ ಎಂದು ತಿಳಿಸಿದರು. ಇದನ್ನೂ ಓದಿ: ಸೂರಜ್ ಪರ ದೂರು ನೀಡಿದ್ದ ಶಿವಕುಮಾರ್ ವಿರುದ್ಧ ಹಣ ದುರುಪಯೋಗ ಆರೋಪ, ಎಫ್ಐಆರ್ ದಾಖಲು
ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಲಾಗುವುದು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಗ್ಯೂ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು. ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ. ಡೆಂಗ್ಯೂ ಈಡಿಸ್ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಸಲಹೆ ನೀಡಿದರು. ಈ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಉಪಸ್ಥಿತರಿದ್ದು, ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.