ರಾಯಚೂರು: ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮೃತಳ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.
ಇಲಾಖೆಯಿಂದ ಮೃತಳ ಕುಟುಂಬಕ್ಕೆ ಸಿಗಬಹುದಾದ ಸ್ಥೈರ್ಯ ನಿಧಿ ಯೋಜನೆಯ ಸೌಲಭ್ಯ ನೀಡಲು ಪೋಷಕರಿಂದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ ಹಾಗೂ ಅವರ ಸಿಬ್ಬಂದಿ ದಾಖಲೆ ಸಂಗ್ರಹಿದ್ದಾರೆ. ಮರಣ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುತ್ತದೆ. ದಾಖಲೆ ಪರಿಶೀಲನೆ ಬಳಿಕ ಮೃತಳ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ.
ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ರಾಯಚೂರಿನಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ನಗರದಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದೆ.