ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ (Dharmasthala Mass Burial Case) ವಿಶೇಷ ತನಿಖಾ ತಂಡದಿಂದ (SIT) ಬಂಧನಕ್ಕೆ ಒಳಗಾದ ಚಿನ್ನಯ್ಯ (Chinnaiah) ಕೊನೆಗೂ ಜೈಲಿನಿಂದ ಹೊರ ಬರಲಿದ್ದಾನೆ.
ಇಂದು ಬೆಳ್ತಂಗಡಿಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದಲ್ಲಿ ಚಿನ್ನಯ್ಯ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ರತ್ನ ಜಾಮೀನು ಪ್ರಕ್ರಿಯೆ ಮುಗಿಸಿದ್ದಾರೆ.
ಒಂದು ಲಕ್ಷ ರೂ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರು ಶ್ಯೂರಿಟಿ ನೀಡಲು ಒಪ್ಪಿಕೊಂಡಿದ್ದಾರೆ. ಕಾನೂನು ಪ್ರಕ್ರಿಯೆ ಮುಗಿಸಿ ಬೆಳ್ತಂಗಡಿಯಿಂದ ಶಿವಮೊಗ್ಗ ಜೈಲಿನತ್ತ ಮಲ್ಲಿಕಾ ಹಾಗೂ ರತ್ನ ತೆರಳಿದ್ದಾರೆ.
ನ.24 ರಂದು 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರ ಕೊರತೆಯಿಂದ ಬಿಡುಗಡೆಯಾಗದೇ ಚಿನ್ನಯ್ಯ ಜೈಲಿನಲ್ಲಿದ್ದ. ಇದನ್ನೂ ಓದಿ: ಧರ್ಮಸ್ಥಳ ಕೇಸ್- ತಿಮರೋಡಿ, ಮಟ್ಟಣ್ಣನವರ್, ಜಯಂತ್, ವಿಠಲ ಗೌಡ, ಜಯಂತ್ ಪಾತ್ರ ಏನು?
ಧರ್ಮಸ್ಥಳ ಪ್ರಕರಣದಲ್ಲಿ ಚಿನ್ನಯ್ಯನನ್ನು ಬಳಸಿಕೊಂಡು ಬುರುಡೆ ಗ್ಯಾಂಗ್ ದೂರು ನೀಡಿತ್ತು. ಆದರೆ ಯಾವಾಗ ಬುರುಡೆ ಗ್ಯಾಂಗ್ ವಿರುದ್ಧವೇ ಚಿನ್ನಯ್ಯ ತಿರುಗಿ ಬಿದ್ದನೋ ಅಲ್ಲಿಂದ ಗ್ಯಾಂಗ್ ಸದಸ್ಯರು ಚಿನ್ನಯ್ಯನ ವಿರುದ್ಧವೇ ಮಾತನಾಡುತ್ತಿದ್ದಾರೆ.
ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು. ಅದರ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತುಗಳನ್ನು ವಿಧಿಸಿ ನ.24ರಂದು ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಹಣ ಪಡೆದು ಬುರುಡೆ ಕಥೆ ಕಟ್ಟಿದ್ದ ಚಿನ್ನಯ್ಯ – ಎಸ್ಐಟಿ ವರದಿಯಲ್ಲಿ ಏನಿದೆ?
ಆ.23ರಂದು ಸುದೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ.6ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.

