ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಕಾಣೆಯಾಗಿದ್ದಾರೆ: ಎಎಪಿ

Public TV
3 Min Read
dinesh gundurao 1

ಬೆಂಗಳೂರು: ಗಾಂಧಿನಗರ ಕ್ಷೇತ್ರದ ರಸ್ತೆಗಳ ತುಂಬಾ ಗುಂಡಿಗಳು ಬಿದ್ದು ಜನರು ಪರದಾಡುತ್ತಿದ್ದರೆ, ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‍ರವರು ಸಮಸ್ಯೆ ಆಲಿಸಿ ಪರಿಹರಿಸುವ ಬದಲು ಕಾಣೆಯಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಟೀಕಿಸಿದ್ದಾರೆ.

AAP 1

ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜನರು ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್‍ರವರನ್ನು ನೆನಪಿಸಿಕೊಂಡು ದಿನೇಶ್ ಗುಂಡೂರಾವ್‍ರವರನ್ನು ಶಾಸಕ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಆದರೆ ಕ್ಷೇತ್ರದ ಮೇಲೆ ಅವರಿಗಿರುವ ಅಸಡ್ಡೆಯಿಂದಾಗಿ ಅವರ ತಂದೆಯ ಹೆಸರಿಗೆ ಧಕ್ಕೆಯಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸಂಪೂರ್ಣ ಕಡೆಗಣಿಸಿ ಹೊರರಾಜ್ಯಗಳಲ್ಲೇ ಠಿಕಾಣಿ ಹೂಡುತ್ತಿದ್ದಾರೆ. ಗಾಂಧಿನಗರದ ಶಾಸಕ ಸ್ಥಾನಕ್ಕಿಂತ ಗೋವಾ ಮತ್ತು ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿಯೇ ಅವರಿಗೆ ಮುಖ್ಯವಾಗಿದೆ. ಪರಿಣಾಮವಾಗಿ ಮತ ನೀಡಿದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಾಮಾನ್ಯ ವ್ಯಕ್ತಿ ಜೊತೆಗೆ ಜಪಾನ್ ಯುವರಾಣಿ ಮದುವೆ-ಪದವಿ, ಗೌರವ ಹಿಂಪಡೆದ ಅರಮನೆ

MOHAN DASARI

ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಯ ಜವಾಬ್ದಾರಿ ಹೊತ್ತಿರುವ ದಿನೇಶ್ ಗುಂಡೂರಾವ್‍ರವರನ್ನು ಸಾಮಾಜಿಕ ತಾಣಗಳಲ್ಲಿ ಪ್ರಶ್ನಿಸಿದರೆ, ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಚುನಾವಣೆ ವೇಳೆ ಆಶ್ವಾಸನೆಗಳನ್ನು ನೀಡಿ ಗೆದ್ದು, ಅಧಿಕಾರ ಸಿಕ್ಕ ನಂತರ ಅಸಹಾಯಕತೆ ವ್ಯಕ್ತಪಡಿಸುವ ಅವರಿಗೆ ನಾಚಿಕೆಯಾಗಬೇಕು. ಇದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನವೇ ಹೊರತು ಬೇರೇನೂ ಅಲ್ಲ. ನೆರೆ ರಾಜ್ಯಗಳಿಗೆ ಪಲಾಯನ ಮಾಡಿರುವ ಅವರು ಇನ್ನಾದರೂ ವಾಪಸ್ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ. ಸಾಧ್ಯವಾಗದಿದ್ದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ಏನಾದರೂ ಮಾಡಿಕೊಳ್ಳಲಿ ಎಂದು ಮೋಹನ್ ದಾಸರಿಯವರು ದಿನೇಶ್ ಗುಂಡೂರಾವ್‍ರವರನ್ನು ತರಾಟೆಗೆ ತೆಗೆದುಕೊಂಡರು.

AAP

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಕಾರ್ಪೋರೇಟರ್‌ಗಳು ಹಾಗೂ ಕಾರ್ಯಕರ್ತರ ನಡವಳಿಕೆ ಮೀತಿಮೀರಿದ್ದು, ಕ್ಷೇತ್ರದ ಸಮಸ್ಯೆಗಳನ್ನು ಪ್ರಶ್ನಿಸುವ ಆಮ್ ಆದ್ಮಿ ಪಾರ್ಟಿ ಮುಖಂಡರಿಗೆ ಬೆದರಿಕೆ ಹಾಕುತ್ತಿದ್ದಾರೆ. ಅವರ ಗೂಂಡಾಗಿರಿ ಇದೇ ರೀತಿ ಮುಂದುವರಿದರೆ ‘ದಿನೇಶ್ ಗುಂಡೂರಾವ್ ಹಠಾವೋ’ ಆಂದೋಲನದ ಮೂಲಕ ಜನರ ಬಳಿ ಹೋಗುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು- ಸಿದ್ದುಗೆ ಸಿ.ಟಿ.ರವಿ ಪ್ರಶ್ನೆ

dinesh gundurao

ದಿನೇಶ್ ಗುಂಡೂರಾವ್‍ರವರು 1999ರಿಂದಲೂ ಕ್ಷೇತ್ರ ಶಾಸಕರಾಗಿದ್ದು, ರಾಜಕೀಯ ಹೊಂದಾಣಿಕೆಯಿಂದ ಕಳೆದ ಐದು ಚುನಾವಣೆ ಗೆದ್ದಿದ್ದಾರೆ. ಸ್ವಲ್ಪವಾದರೂ ಸುಸ್ಥಿತಿಯಲ್ಲಿದ್ದ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಿರುವುದೇ ಅವರ 22 ವರ್ಷಗಳ ಸಾಧನೆ. ಶಾಲೆ, ಆಸ್ಪತ್ರೆ ಮುಂತಾದ ಮೂಲಸೌಕರ್ಯಗಳು ಸೂಕ್ತ ರೀತಿಯಲ್ಲಿ ಇಲ್ಲದ ಗಾಂಧಿನಗರ ಕ್ಷೇತ್ರವು ದೇಶದಲ್ಲೇ ಅತ್ಯಂತ ಹಿಂದುಳಿದ ಕ್ಷೇತ್ರವಾಗಿರಬಹುದು. ಕ್ಷೇತ್ರದ ಬಗ್ಗೆ ಹಾಗೂ ಮತದಾರರ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ತೋರುವ ಶಾಸಕರು ಬಹುಶಃ ಮತ್ತೊಬ್ಬರು ಇರಲಿಕ್ಕಿಲ್ಲ. ಸಮಸ್ತ ಗಾಂಧಿನಗರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಇಲ್ಲಿ ಆಮ್ ಆದ್ಮಿ ಪಾರ್ಟಿಯನ್ನು ಬಲಗೊಳಿಸಲಾಗುತ್ತಿದೆ ಎಂದರು.

AAP USHA MOHAN

ಮಹಿಳಾ ಮುಖಂಡರಾದ ಉಷಾ ಮೋಹನ್‍ರವರು ಮಾತನಾಡಿ, ದಿನೇಶ್ ಗುಂಡೂರಾವ್‍ರವರ ಅಧಿಕಾರದಲ್ಲಿ ಅವರ ಪತ್ನಿ ಟಬು ರಾವ್‍ರವರ ಹಸ್ತಕ್ಷೇಪ ಅತಿಯಾಗಿದೆ. ಶಾಸಕರು ಕ್ಷೇತ್ರದಲ್ಲಿ ದೀರ್ಘಕಾಲ ಇಲ್ಲದಿರುವುದರ ಲಾಭವನ್ನು ಟಬು ರಾವ್ ಪಡೆಯುತ್ತಿದ್ದಾರೆ. ಜನಪ್ರತಿನಿಧಿಯಂತೆ ಅಧಿಕಾರದಿಂದ ಮೆರೆಯುತ್ತಿದ್ದಾರೆ. ಇದು ಅಸಂವಿಧಾನಿಕವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುವ ದ್ರೋಹವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಎಂ ಆಗ್ಲೇಬೇಕುಂತ ರಗ್ಗು ಹೊದ್ದು ಮಲಗಿದ್ದ ಸಿದ್ದರಾಮಯ್ಯರನ್ನು ಕರ್ಕೊಂಡು ಬಂದಿದ್ದು ನಾನು: ಹೆಚ್‍ಡಿಕೆ

ಕಾನೂನು ಸಮರಕ್ಕೆ 57 ವಕೀಲರು
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ವಕೀಲರ ಘಟಕದ ಅಧ್ಯಕ್ಷ ಮಂಜುನಾಥ ಸ್ವಾಮಿಯವರು ಮಾತನಾಡಿ, ರಸ್ತೆಗುಂಡಿಗಳಿಗೆ ಕಾರಣರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸಲು 57 ಅನುಭವಿ ವಕೀಲರ ತಂಡವನ್ನು ರಚಿಸಲಾಗಿದೆ. ಸದ್ಯದಲ್ಲೇ 150ಕ್ಕೂ ಹೆಚ್ಚು ವಕೀಲರು ನಮ್ಮೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. ಕರ್ತವ್ಯದಲ್ಲಿ ಲೋಪ ಎಸಗಿದ ಹಾಗೂ ಅಕ್ರಮದಲ್ಲಿ ಭಾಗಿಯಾದವರು ತಕ್ಕ ಬೆಲೆ ತೆರುವಂತೆ ಮಾಡುತ್ತೇವೆ ಎಂದು ಹೇಳಿದರು.

ಕ್ಷೇತ್ರದ ಮುಖಂಡರುಗಳಾದ ಪುಷ್ಪ ಕೇಶವ್, ಗೋಪಿನಾಥ್ ಹಾಗೂ ಪಕ್ಷದ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *