ಬೆಂಗಳೂರು: ಅತೃಪ್ತ ಶಾಸಕರನ್ನು ಭೇಟಿ ಮಾಡುವುದಿಲ್ಲ ಹಾಗೂ ಅವರೊಂದಿಗೆ ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕಮಟಳ್ಳಿ ಹಾಗೂ ಉಮೇಶ್ ಜಾದವ್ ಇಂದು ಕಲಾಪಕ್ಕೆ ಹಾಜರಾಗಿದ್ದಾರೆ. ಅವರು ರಾಜೀನಾಮೆ ಕೊಡುತ್ತಾರೋ, ಬಿಡುತ್ತಾರೋ ನನಗೆ ಗೊತ್ತಿಲ್ಲ. ಅದು ಅತೃಪ್ತ ಶಾಸಕರ ವೈಯಕ್ತಿಕ ವಿಚಾರ ಎಂದು ಚಾಟಿ ಬೀಸಿದ್ದಾರೆ.
ಕಲಾಪದಲ್ಲಿ ನಾನು ಯಾವ ಅತೃಪ್ತರ ಜೊತೆಗೂ ಮಾತನಾಡಿಲ್ಲ. ಪಕ್ಷದ ಸಿದ್ಧಾಂತ ಹಾಗೂ ನಾಯಕರ ತೀರ್ಮಾನಕ್ಕೆ ಅತೃಪ್ತ ಶಾಸಕರು ಬದ್ಧವಾಗಿರಬೇಕು ಎಂದು ಬಿಸಿ ಮುಟ್ಟಿಸಿದ್ದಾರೆ.
ಕೆಲ ಶಾಸಕರು ಕಾಂಗ್ರೆಸ್ ನಾಯಕರ ಕೈಗೆ ಸಿಗದೇ, ಸಿಎಲ್ಪಿ ಸಭೆಗೂ ಹಾಜರಾಗದೇ ಭಾರೀ ಚರ್ಚೆಗೆ ಕಾರಣರಾಗಿದ್ದರು. ನಮ್ಮ ಶಾಸಕರು ಕ್ಷೇತ್ರಕ್ಕೆ ಬರುತ್ತಿಲ್ಲ. ಅವರು ಮುಂಬೈ ನಗರದಲ್ಲಿ ದಿಗ್ಭಂದನಕ್ಕೆ ಒಳಗಾಗಿದ್ದಾರೆ. ಅವರನ್ನು ಹುಡುಕಿಕೊಡಿ ಎಂದು ಅಥಣಿ ಹಾಗೂ ಗೋಕಾಕ್ ಮತದಾರರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದರು. ಆದರೆ ಇಂದು ಎಲ್ಲ ಅತೃಪ್ತ ಶಾಸಕರು ಅಧಿವೇಶನಕ್ಕೆ ಹಾಜರಾಗಿ ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv