ಆದಾಯ ಮೀರಿ ಆಸ್ತಿ ಗಳಿಕೆ ಕೇಸ್| ಸಿಬಿಐ ಎಫ್‌ಐಆರ್ ರದ್ದು ಮಾಡಲ್ಲ: ಸುಪ್ರೀಂ ಹೇಳಿದ್ದೇನು?

Public TV
3 Min Read
DK SHIVAKUMAR

ನವದೆಹಲಿ: ತನ್ನ ವಿರುದ್ಧ ಸಿಬಿಐ (CBI) ದಾಖಲಿಸಿರುವ ಅದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು(Disproportionate Assets Case) ರದ್ದುಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಬೇಲಾ ಎಂ ತ್ರಿವೇದಿ ಮತ್ತು ನ್ಯಾ. ಎಸ್‌ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಜಾ ಮಾಡಿದೆ.

ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ, ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ಈಗಾಗಲೇ ರಾಜ್ಯ ಸರ್ಕಾರ ಹಿಂಪಡೆದಿದೆ. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ನಮ್ಮ ಕಕ್ಷಿದಾರರನ್ನು ತನಿಖೆ ನಡೆಸುತ್ತಿದ್ದಾರೆ. ಇಡಿ ಪ್ರಕರಣವನ್ನು ಈಗಾಗಲೇ ರದ್ದು ಮಾಡಿದೆ. ಒಂದೇ ಕೇಸ್ ಅನ್ನು ಎರಡು ಸಂಸ್ಥೆಗಳು ತನಿಖೆ ಮಾಡುತ್ತಿರುವುದು ಸರಿಯಲ್ಲ ಎಂದು ವಾದಿಸಿದರು.

Supreme Court

ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ನ್ಯಾ.ಬೇಲಾ ಎಂ ತ್ರಿವೇದಿ, ಸರ್ಕಾರದ ಮಂಜೂರಾತಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡುವುದು ಹೇಗೆ? ಇದು ಕೇಳರಿಯದ ಸಂಗತಿ. ಹೈಕೋರ್ಟ್ (High Court) ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದೆ. ಆದರೆ ನಿಮ್ಮ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯ (PC Act) ಅಡಿಯನ್ನು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪಿಸಿ ಆಕ್ಟ್ ಅಡಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಸಿಬಿಐ ತನಿಖೆ ಮಾಡಬಹುದು, ನಾವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ, ಕ್ಷಮಿಸಿ ಎಂದು ಅರ್ಜಿ ವಜಾಗೊಳಿಸಿದರು. ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್‌

ಡಿಕೆ ಶಿವಕುಮಾರ್ ವಿರುದ್ಧ 2020 ರ ಅಕ್ಟೋಬರ್ 3 ರಂದು ಎಫ್‌ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ. ಏಪ್ರಿಲ್ 2013 ರಲ್ಲಿ 33.92 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದ ಡಿ.ಕೆ ಶಿವಕುಮಾರ್ 2018 ರ ವೇಳೆಗೆ 128.6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ. ಏಪ್ರಿಲ್ 30, 2018ರ ವೇಳೆಗೆ ಅವರ ಒಟ್ಟು ಆಸ್ತಿ ಮೌಲ್ಯ 162.53 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಿಬಿಐ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ.

 

CBI 1

 

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.  ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಅಕ್ಟೋಬರ್ 2023 ರಲ್ಲಿ ಸಿಬಿಐ ತನಿಖೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಇದೇ ವೇಳೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು.

ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನಿಸಿದ್ದಾರೆ. ಸಿಬಿಐ ಕೂಡಾ ಒಂದು ಅರ್ಜಿ ಸಲ್ಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಅಂತ್ಯವಾಗಿದ್ದು ಆದೇಶ ಕಾಯ್ದಿರಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದರೆ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಸಂಕಷ್ಟ ಹೆಚ್ಚಾಗಲಿದೆ. ಸದ್ಯ ಹೈಕೋರ್ಟ್‌ ಆದೇಶದ ಮೇಲೆ ಡಿಕೆ ಶಿವಕುಮಾರ್‌ ಭವಿಷ್ಯ ನಿಂತಿದೆ.

Share This Article