ಬೆಂಗಳೂರು: ಕುಮಾರಸ್ವಾಮಿ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೆಂಗಳೂರಿನ ಐವರು ಶಾಸಕರ ವಿರುದ್ಧ ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತೊಡೆತಟ್ಟಿದ್ದಾರೆ.
ಕುಮಾರಸ್ವಾಮಿ ಮುಂದೆಯೇ ಕೈ ಟ್ರಬಲ್ ಶೂಟರ್ ಐವರು ಶಾಸಕರನ್ನು ನಾನೇ ಸೋಲಿಸುತ್ತೇನೆ ಎಂದು ಶಪಥ ಮಾಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಹೊಸಕೋಟೆಯ ಎಂಟಿಬಿ ನಾಗರಾಜ್, ಕೆಆರ್ ಪುರಂ ಭೈರತಿ ಬಸವರಾಜು, ಯಶವಂತಪುರದ ಎಸ್.ಟಿ.ಸೋಮಶೇಖರ್, ಮಹಾಲಕ್ಷ್ಮಿ ಲೇಔಟಿನ ಗೋಪಾಲಯ್ಯ ಹಾಗೂ ರಾಜರಾಜೇಶ್ವರಿ ನಗರದ ಮುನಿರತ್ನ ಅವರನ್ನು ಸೋಲಿಸುತ್ತೇನೆ ಎಂದು ತೊಡೆ ತಟ್ಟಿದ್ದಾರೆ.
ಶಾಸಕರು ರಾಜೀನಾಮೆ ನೀಡಿದ್ದರೂ ವಿಪ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಈಗಾಗಲೇ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿದೆ. ಒಂದು ವೇಳೆ ಅನರ್ಹತೆಗೊಂಡ ಬಳಿಕ ಕೋರ್ಟ್ ಮೊರೆ ಹೋದರೆ ಅಲ್ಲಿ ಈ ಆದೇಶ ರದ್ದಾದರೆ ಮತ್ತೆ ಇವರು ಅಲ್ಲೇ ಸ್ಪರ್ಧಿಸುವ ಸಾಧ್ಯತೆಯಿದೆ.
ಈ ಕಾರಣಕ್ಕೆ ಐದು ಕ್ಷೇತ್ರಗಳಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಡಿ.ಕೆ.ಶಿವಕುಮಾರ್ ಸಿದ್ಧಪಡಿಸಿಕೊಂಡಿದ್ದಾರೆ. ಕೆಲವೇ ದಿನಗಳಲ್ಲಿ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಓಡಾಡಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸುವ ಸಾಧ್ಯತೆಯಿದೆ.
ಈಗಾಗಲೇ ಪಕ್ಷದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದು, 5 ಕ್ಷೇತ್ರಗಳ ಹೊಣೆ ಹೊರುವುದಾಗಿ ಹೇಳಿದ್ದಾರೆ. ಐದು ಕ್ಷೇತ್ರದಲ್ಲಿ ಶಾಸಕರನ್ನು ಸೋಲಿಸಲು ಡಿಕೆಶಿ ಜೆಡಿಎಸ್ ಸಹಕಾರವನ್ನು ಕೇಳಿದ್ದಾರೆ. ಈ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಹಾಕುತ್ತದೋ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ. ಒಂದು ವೇಳೆ ಹಾಕದೇ ಇದ್ದರೆ ಈ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಭಾರೀ ಸ್ಪರ್ಧೆ ನಡೆಯಲಿದೆ.
ಸಿಎಂ ಮಂಡಿಸಿದ್ದ ವಿಶ್ವಾಸ ಮತಯಾಚನೆಯ ಚರ್ಚೆಯ ವೇಳೆ ಡಿಕೆ ಶಿವಕುಮಾರ್ ರಾಜೀನಾಮೆ ನೀಡಿದ ಶಾಸಕರು ನನ್ನ ಮಿತ್ರರಾಗಿದ್ದಾರೆ. ಚುನಾವಣೆಯ ಸಮಯದಲ್ಲಿ ನಾನು ಅವರಿಗೆ ಸಾಕಷ್ಟು ಸಹಕಾರವನ್ನು ನೀಡಿದ್ದೆ ಎಂದು ಹೇಳಿದ್ದರು.