ಬೆಂಗಳೂರು: ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ಕೈ ಪಾಳಯದಲ್ಲಿ ಕೇಳಿ ಬರುತ್ತಿದೆ.
ಬಿಜೆಪಿ ವಿರುದ್ಧ ಪ್ರಬಲ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆಯಲ್ಲಿ ಕಾಂಗ್ರೆಸ್ ಇದೆ. ಹೀಗಾಗಿ ಪ್ರಬಲ ನಾಯಕರ ರೇಸ್ನಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರೂ ಕೇಳಿಬಂದಿತ್ತು. ಆದರೆ ಅವರು ವಿಪಕ್ಷ ನಾಯಕ ರೇಸ್ನಿಂದ ಹಿಂದೆ ಸರಿದಿದ್ದು, ನನಗೆ ವಿಪಕ್ಷ ಸ್ಥಾನ ಬೇಡವೇ ಬೇಡ ಎಂದಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ಸದ್ಯಕ್ಕೆ ಡಿಕೆಶಿ ಯಾವುದೇ ಜವಾಬ್ದಾರಿ ವಹಿಸಿಕೊಳ್ಳದೆ ಸೈಲೆಂಟಾಗಿರಲು ತೀರ್ಮಾನಿಸಿದ್ದಾರೆ. ಜೊತೆಗೆ ಐಟಿ(ಆದಾಯ ತೆರಿಗೆ) ಹಾಗೂ ಇಡಿ(ಜಾರಿ ನಿರ್ದೇಶನಾಲಯ) ಸಮಸ್ಯೆಗಳನ್ನ ಪರಿಹರಿಸಿಕೊಳ್ಳುವತ್ತ ಗಮನ ಹರಿಸಲಿದ್ದಾರೆ. ಒಂದು ವರ್ಷದಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು ಹಾಗೂ ಬಿಜೆಪಿ ಸರ್ಕಾರದ ಆಯಸ್ಸನ್ನ ಗಮನದಲ್ಲಿಟ್ಟುಕೊಂಡು ಪಕ್ಷದ ಅಧ್ಯಕ್ಷ ಸ್ಥಾನವನ್ನು ಪಡೆಯುವ ಬಗ್ಗೆ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಒಂದು ವೇಳೆ ಬಿಜೆಪಿ ಸರ್ಕಾರ ನಾಲ್ಕು ವರ್ಷ ಸುಭದ್ರವಾಗಿ ನಡೆಯುವ ಲಕ್ಷಣ ಕಾಣಿಸಿದರೆ ಚುನಾವಣೆಗೆ ಒಂದು ವರ್ಷವಿರುವಾಗ ಕೆಪಿಸಿಸಿ ಗದ್ದುಗೆ ಏರುವ ಆಸೆಯನ್ನೂ ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಮೂಲಕ ಪಕ್ಷವನ್ನ ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಸ್ಥಾನಕ್ಕೇರುವ ಕನಸು ಟ್ರಬಲ್ ಶೂಟರದ್ದು ಎನ್ನಲಾಗುತ್ತಿದೆ. ಹೀಗೆ ಭವಿಷ್ಯದ ಪ್ಲಾನ್ ಗಾಗಿ ತಮ್ಮ ಇಂದಿನ ಅಧಿಕಾರದ ಆಸೆಯನ್ನು ಡಿಕೆಶಿ ಕೈ ಬಿಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.