ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ʻಕೈʼ ಶಾಸಕರ ದೆಹಲಿ (Delhi) ಪರೇಡ್ ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಈಗಾಗಲೇ 20 ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲೇ ಬೀಡುಬಬಿಟ್ಟಿದ್ದು, ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದಾರೆ.
ಸೋನಿಯಾ ಗಾಂಧಿ ನಿವಾಸದಲ್ಲಿ ರಣದೀಪ್ ಸುರ್ಜೇವಾಲ, ಕೆ.ಸಿ ವೇಣುಗೋಪಾಲ್ ಅವರ ಬಳಿಕ ರಾಹುಲ್ ಗಾಂಧಿ (Rahul Gandhi) ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿ
ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಆರಂಭಿಕ ಸುತ್ತಿನ ಮಾತುಕತೆ ನಡೆಸುತ್ತಿರುವ ಡಿಕೆ ಶಿವಕುಮಾರ್ ಅವರು, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಮುಂದೆ ಎರಡು ದಿನಾಂಕಗಳನ್ನ ಪ್ರಸ್ತಾಪಿಸಿದ್ದಾರೆ. ಜುಲೈ 20 ರ ಸೋಮವಾರ ಹಾಗೂ ಜುಲೈ 22 ರ ಬುಧವಾರ ಸಂಪುಟ ವಿಸ್ತರಣೆಗೆ ಶುಭಮುಹೂರ್ತ ಎಂದಿದ್ದಾರೆ. ಇಂದು ಹೈಕಮಾಂಡ್ ಒಪ್ಪಿದ್ರೆ, ಜು.20 ರಂದೇ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದ್ದು, ಅಂದೇ ನೂತನ ಸಚಿವರು ಪ್ರಮಾಣ ಸ್ವೀಕರಿಸಲಿದ್ದಾರೆ.
ಇನ್ನೂ 2 ಅಥವಾ 3 ಸ್ಥಾನ ಖಾಲಿ ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದೆ, ಆದ್ರೆ ಚುನಾವಣಾ ದೃಷ್ಟಿಯಿಂದ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಸಿಎಂ ಪ್ರಸ್ತಾಪ ಇಟ್ಟಿದ್ದಾರೆ ಎನ್ನಲಾಗ್ತಿದೆ.

ಖರ್ಗೆ ವಾಪಸ್ ಆದ ಬಳಿಕ ಮತ್ತೊಮ್ಮೆ ಸಭೆ
ಇನ್ನೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆಯುತ್ತಿದ್ದ ಸಭೆ ಅಂತ್ಯಗೊಂಡಿದ್ದು, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್ ಹಾಗೂ ರಣದೀಪ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ 2ನೇ ಸುತ್ತಿನ ಚರ್ಚೆ ನಡೆದಿದೆ. ಈ ಮಧ್ಯೆ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ವಾಪಸ್ಸಾದ ಹಿನ್ನೆಲೆ ಸಭೆ ಮುಕ್ತಾಯಗೊಳಿಸಲಾಗಿದೆ. ಅಗತ್ಯ ಬಿದ್ದರೆ ಖರ್ಗೆ ಅವರನ್ನು ವಾಪಸ್ ಕರೆಸಿ ಚರ್ಚಿಸುವುದಾಗಿ ಹೇಳಿರುವ ರಾಗಾ, ಎರಡು ದಿನಗಳ ಮತ್ತೊಮ್ಮೆ ಸಭೆ ಸೇರುವ ಸುಳಿವು ಕೊಟ್ಟಿದ್ದಾರೆ.
