ಬೆಂಗಳೂರು: ಕಾಂಗ್ರೆಸ್ (Congress) ಅಭ್ಯರ್ಥಿಗಳ ಮೊದಲ ಪಟ್ಟಿ ಇವತ್ತು ಬಿಡುಗಡೆ ಮಾಡುತ್ತಿಲ್ಲ, ಆದರೆ ಇನ್ನೂ ಎರಡು, ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.
ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಲವು ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಮಲ್ಲಿಕಾರ್ಜುನ ಖರ್ಗೆ ಅವರು ಹಬ್ಬಕ್ಕೆ ಬೆಂಗಳೂರಿಗೆ (Bengaluru) ಬಂದಿದ್ದಾರೆ. ಹೀಗಾಗಿ ಎರಡು ಮೂರು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿದ ಅವರು, ಕಳೆದ 3 ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಈ ರೀತಿ ನೀವೂ ಹಾರೈಸಿ. ಕಾಂಗ್ರೆಸ್ ಸರ್ಕಾರ ಜನಪರವಾಗಿರಲಿದೆ. ಹಲವಾರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೀವಿ. ಬಿಜೆಪಿಯವರ ತರಹ ನಾವು ಸುಳ್ಳು ಆಶ್ವಾಸನೆ ಕೊಡಲ್ಲ ಎಂದು ಹೇಳಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಮುಂದಾದ ಅನಿಲ್ ಬೆನಕೆ
ಪ್ರತಿಯೊಬ್ಬರ ಅಕೌಂಟ್ಗೆ 15 ಲಕ್ಷ ರೂ. ಕೊಡುತ್ತೇವೆ ಎಂದರು. ಉದ್ಯೋಗ ಸೃಷ್ಟಿ ಭರವಸೆ ನೀಡಿದ್ರು ಏನಾದ್ರೂ ಮಾಡಿದ್ರಾ? ಆದರೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಏನು ಮಾಡಬೇಕು ಎಂಬ ಬಗ್ಗೆ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ನಾವು ಈಡೇರಿಸಿಯೇ ತೀರುತ್ತೇವೆ ಎಂದರು. ಇದನ್ನೂ ಓದಿ: ಟಿಕೆಟ್ ಘೋಷಣೆಗೂ ಮುನ್ನವೇ ಅಭ್ಯರ್ಥಿಯಾದ ಮಂಡ್ಯ ಕಾಂಗ್ರೆಸ್ ಮುಖಂಡ