ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆಗೆ ಸಂಬಂಧಿಸಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ರಕ್ಷಣೆ ನೀಡದೇ ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಯಾವುದಕ್ಕೆ ಆಗಿದೆ ಎನ್ನುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ಆದರೆ ಘಟನೆ ಕುರಿತು ತನಿಖೆ ಆಗಬೇಕು. ಈಗಾಗಲೇ ಶಾಸಕ ಸಂಗಮೇಶ್ ಬಳಿ ಮಾಹಿತಿ ಪಡೆಯುತ್ತಿದ್ದೇನೆ. ಎಲ್ಲರೂ ಶಾಂತಿ ಕಾಪಾಡಬೇಕು. ಯಾರೂ ಈ ಘಟನೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.
ಕುವೆಂಪು ಶಾಂತಿಯ ತೋಟ ಎಂದಿದ್ದಾರೆ. ಶಿವಮೊಗ್ಗ ಶಾಂತಿಯಿಂದಿರಬೇಕು, ರಾಜ್ಯ ಶಾಂತಿಯಿಂದ ಇರಬೇಕು ಎಂದು ಹೇಳಿದ್ದರು. ಆದರೆ ಇಲ್ಲಿಂದಲೇ ಶಾಂತಿ ಕದಡುತ್ತಿದೆ. ಈ ರೀತಿ ಆಗಬಾರದು. ನಮ್ಮ ದೇಶ ಶಾಂತಿಯಿಂದ ಇರಬೇಕು. ಇದಕ್ಕಾಗಿಯೇ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ನಾವು ಹೋರಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಯುವಕನ ಬರ್ಬರ ಹತ್ಯೆ – ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ
ಈಗಾಗಲೇ ಶಿವಮೊಗ್ಗದಲ್ಲಿ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಪರಿಸ್ಥಿತಿ ನಿಯಂತ್ರಿಸಲು ಗುಂಪುಗೂಡಿದ್ದ ಯುವಕರನ್ನು ಪೊಲೀಸರು ಮನೆಯತ್ತ ವಾಪಸ್ ಕಳುಹಿಸಿದ್ದಾರೆ ಮತ್ತು ಮುಂಜಾಗ್ರತಾ ಕ್ರಮವಾಗಿ ತಕ್ಷಣದಿಂದಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ