ಹಾಸನ: ತಮಿಳುನಾಡಿಗೆ (Tamil Nadu) ನೀರು ಹರಿಸುವಂತೆ ಎಸಿ ರೂಂನಲ್ಲಿ ಕುಳಿತುಕೊಂಡು ತೀರ್ಮಾನ ಕೊಡುವುದಲ್ಲ. ಕರ್ನಾಟಕ, ತಮಿಳುನಾಡು ಜಲಾನಯನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು CWRC & CWMA ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಸುಮಾರು 150 ವಿಧಾನಸಭಾ ಕ್ಷೇತ್ರಗಳಲ್ಲಿ ರೈತರು ಬಿತ್ತಿದ ಬೆಳೆಗಳು ಒಣಗುತ್ತಿವೆ. ಹಲವು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಇನ್ನೂ ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳು ಇನ್ನೂ ಸಂಪೂರ್ಣ ಭರ್ತಿಯಾಗಿಲ್ಲ. ಆದರೂ ಪ್ರತಿದಿನ 3,500 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿರುವುದು ಅವೈಜ್ಞಾನಿಕ ಎಂದು ಟೀಕಿಸಿದರು. ಈ ತೀರ್ಪಿನಿಂದ ಮೈಸೂರು, ಮಂಡ್ಯ ಭಾಗದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವುದು ಸಹಜ ಎಂದು ಹೇಳಿದರು.
ನಮ್ಮ ಜಲಾಶಯಗಳಲ್ಲಿ ಇರುವ 55 ಟಿಎಂಸಿ ನೀರಿನಲ್ಲಿ ಸುಮಾರು 30 ಟಿಎಂಸಿ ನೀರು ಮುಂದಿನ ಏಳು ತಿಂಗಳು ಬೆಂಗಳೂರಿನ ಕುಡಿಯುವ ನೀರಿಗೆ ಬೇಕಾಗುತ್ತದೆ. ಪರಿಸರ ಸಂರಕ್ಷಣೆಗೆ ಇನ್ನೂ 10 ಟಿಎಂಸಿ ನೀರು ಅಗತ್ಯ. ಮುಂದಿನ ದಿನಗಳಲ್ಲಿ ಮಳೆ ಬರುತ್ತದೆ ಎಂಬ ಊಹೆಯ ಮೇಲೆ ನೀರು ಬಿಡುವಂತೆ ಆದೇಶ ಮಾಡುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಆ.2ಕ್ಕೆ ಕಾನ್ಸ್ಟೇಬಲ್ ಪರೀಕ್ಷೆ| 3,991 ಹುದ್ದೆಗೆ ಬರೆಯುತ್ತಿದ್ದಾರೆ 4.54 ಲಕ್ಷ ಅಭ್ಯರ್ಥಿಗಳು, ಕ್ಯಾಮೆರಾ ಕಣ್ಗಾವಲು
ತಮಿಳುನಾಡು ಕೃಷಿಗೆ ನೀರು ಕೇಳುತ್ತಿದೆ. ಆದರೆ, ಕರ್ನಾಟಕದಲ್ಲೂ ರೈತರು ಸಂಕಷ್ಟದಲ್ಲಿದ್ದಾರೆ. ಮೊದಲು ರಾಜ್ಯದ ಜನರ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಹಕ್ಕು ಎಲ್ಲಕ್ಕಿಂತ ಮುಖ್ಯ ಎಂದು ಒತ್ತಿ ಹೇಳಿದರು.
CWRC ಹಾಗೂ CWMA ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ, ಕರ್ನಾಟಕ ಮತ್ತು ತಮಿಳುನಾಡಿನ ನೈಜ ಪರಿಸ್ಥಿತಿ ಪರಿಶೀಲಿಸಿ ಬಳಿಕ ತೀರ್ಮಾನ ತೆಗೆದುಕೊಳ್ಳಬೇಕಿತ್ತು. ರಾಜ್ಯ ಸರ್ಕಾರವೂ ಈ ವಿಚಾರದಲ್ಲಿ ಇನ್ನಷ್ಟು ಒತ್ತಾಯ ಮಾಡಬೇಕಿತ್ತು ಎಂದು ಹೇಳಿದರು.
ಭಾನುವಾರ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ತಮ್ಮ ಪಕ್ಷದ ಪರವಾಗಿ ಭಾಗವಹಿಸುವುದಾಗಿ ತಿಳಿಸಿದ ಕುಮಾರಸ್ವಾಮಿ, ಇದು ರಾಜಕೀಯ ಮಾಡುವ ಸಮಯವಲ್ಲ. ರೈತರ ಬದುಕು ಮತ್ತು ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.ಇದನ್ನೂ ಓದಿ: ರಕ್ತಸಿಕ್ತ ಸಮವಸ್ತ್ರ, ಹಲ್ಲೆಯಿಂದ ತಲೆಗೆ ಹೊಲಿಗೆ: ಜಂತರ್ ಮಂತರ್ನಲ್ಲಿ ಪೊಲೀಸರ ಮೇಲಾದ ದೌರ್ಜನ್ಯದ ಬಗ್ಗೆ ಕುಟುಂಬಸ್ಥರ ನೋವಿನ ನುಡಿ
