ಬೆಂಗಳೂರು: ರಾಜ್ಯದ ಯೋಜನೆ ವಿಚಾರದಲ್ಲಿ ಮತ್ತೆ ತಮಿಳುನಾಡು ಕಾಲು ಕೆದರಿಕೊಂಡು ಜಗಳಕ್ಕೆ ಬಂದಿದೆ. ಕರ್ನಾಟಕದ ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಅಡ್ಡಗಾಲು ಹಾಕಿದೆ.
ಕರ್ನಾಟಕ ರಾಜ್ಯ ಕಾವೇರಿ ನದಿಗೆ ರೂಪಿಸಲು ಹೊರಟಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಅವಕಾಶ ನೀಡಬಾರದೆಂದು ತಮಿಳುನಾಡು ಮುಖ್ಯಮಂತ್ರಿ ಸಿಎಂ ಯಡಪ್ಪಾಡಿ ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಎರಡು ಪುಟಗಳ ಪತ್ರ ಬರೆದಿರುವ ಅವರು, ಮೇಕೆದಾಟು ಯೋಜನೆ ಸಂಬಂಧ ಕರ್ನಾಟಕ ಮಾಡಿರುವ ಮನವಿಯನ್ನು ತಿರಸ್ಕರಿಸಬೇಕು. ಹೊಸ ಯೋಜನೆಗಳಿಗೂ ಮುನ್ನ ಹಂಚಿಕೆಯಾಗಿರುವ ನೀರನ್ನು ಸಮಗ್ರವಾಗಿ ಹರಿಯುವಂತೆ ಮಾಡಬೇಕೆಂದು ಪತ್ರದಲ್ಲಿ ಬರೆದಿದ್ದಾರೆ.
ಮೇಕೆದಾಟು ಯೋಜನೆ ಮೂಲಕ ಕಾವೇರಿ ನದಿಯ ನೈಸರ್ಗಿಕ ಹರಿವಿಗೆ ಕರ್ನಾಟಕ ಅಡ್ಡಗಾಲು ಹಾಕುತ್ತಿದೆ. ಈ ಯೋಜನೆಯಿಂದ ಲಕ್ಷಾಂತರ ತಮಿಳುನಾಡಿನ ರೈತರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಯೋಜನೆಯ ಮನವಿಯನ್ನು ತಿರಸ್ಕರಿಸುವಂತೆ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ನಿರ್ದೇಶಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುವ ಮೂಲಕ ಕರ್ನಾಟಕದ ಮೇಕೆದಾಟು ಯೋಜನೆಗೆ ಪ್ರಾರಂಭದಲ್ಲೇ ತಮಿಳುನಾಡು ಖ್ಯಾತೆ ತೆಗೆದಿದ್ದು, ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಮನವಿಯನ್ನು ಹೇಗೆ ಬಗೆಹರಿಸುತ್ತದೆ ಎಂಬುದು ಸದ್ಯದ ಕುತೂಹಲಕಾರಿ ವಿಷಯವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv