ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಗೆ ಹೋರಾಡಬೇಕು ಎಂಬ ಅನುಮಾನ ಶುರುವಾರಿದೆ ಎಂದು ತೆಲಂಗಾಣದ ಕಾಂಗ್ರೆಸ್ ನಾಯಕ ಕೊಮಟಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಹೇಳಿದ್ದಾರೆ.
ಬಿಜೆಪಿಯು ಮುಂದಿನ ದಿನಗಳಲ್ಲಿ ತೆಲಂಗಾಣದ ವಿವಿಧ ಕಡೆಗಳಲ್ಲಿ ಗುರುತಿಸಿಕೊಳ್ಳಲಿದೆ. ದೇಶದ ಜನತೆ ನರೇಂದ್ರ ಮೋದಿ ಅವರನ್ನು ಎರಡನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ. ಇದು ಅನೇಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೆಚ್ಚು ಅನುಕೂಲವಾಗಲಿದೆ. ಈ ಮೂಲಕ ಕೆಲ ಪ್ರಮುಖ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿಯು ಹೊಸ ಕ್ರಾಂತಿಯನ್ನ ಮಾಡಲಿದೆ. ಹೀಗಾಗಿ ಪ್ರಧಾನಿ ಮೋದಿ ಅವರನ್ನು ಎದುರಿಸುವುದು ಕಾಂಗ್ರೆಸ್ಗೆ ದೊಡ್ಡ ಸವಾಲು ಎಂದು ಹೇಳಿದ್ದಾರೆ.
ಕೊಮಟಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಅವರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ತೆಲಂಗಾಣ ರಾಜಕೀಯ ಅಂಗಳದಲ್ಲಿ ಶುರುವಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ವೆಂಕಟ್ ರೆಡ್ಡಿ, ಸಹೋದರ ರಾಜ್ ಗೋಪಾಲ್ ರೆಡ್ಡಿ ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಈ ಬಗ್ಗೆ ನಾನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ಕಾರ್ಯಕರ್ತರ ಜೊತೆಗೆ ಕುಳಿತು ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ತೆಲಂಗಾಣ ವಿಧಾನಸಭೆಯು ಒಟ್ಟು 119 ಸದಸ್ಯ ಬಲವನ್ನು ಹೊಂದಿದೆ. 91 ಸ್ಥಾನಗಳನ್ನು ಹೊಂದಿರುವ ಟಿಆರ್ಎಸ್ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ 19 ಶಾಸಕರನ್ನು ಹೊಂದಿತ್ತು. ಆದರೆ ಉತ್ತಮ್ ಕುಮಾರ್ ರೆಡ್ಡಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸತ್ಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ 18 ಸ್ಥಾನಕ್ಕೆ ಕುಸಿದಿದೆ. ಈ ಬೆನ್ನಲ್ಲೇ 12 ಶಾಸಕರು ಕಾಂಗ್ರೆಸ್ ಬಿಟ್ಟು ಟಿಆರ್ಎಸ್ ಸೇರಿದ್ದಾರೆ. ಈ ಬೆಳವಣಿಗೆ ತೆಲಂಗಾಣದ ಕಾಂಗ್ರೆಸ್ ನಾಯಕರಲ್ಲಿ ಆತಂಕ ಹುಟ್ಟಿಸಿತ್ತು.