– ಈಗ ಎಲೆಕ್ಷನ್ ನಡೆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ
ಚಿಕ್ಕಬಳ್ಳಾಪುರ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಮಾತಿಗೆ ಇಲ್ಲಿ ಬೆಲೆ ಇಲ್ಲ. ರಾಹುಲ್ ಗಾಂಧಿಗೆ ಬೆಲೆ ಇದ್ದಿದ್ದರೆ ನನಗೆ ಸಚಿವ ಸ್ಥಾನ ಸಿಗಬೇಕಾಗಿತ್ತು ಎಂದು ಶಾಸಕ ಡಾ. ಸುಧಾಕರ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡುವುದಾಗಿ ಈ ಹಿಂದೆ ರಾಹುಲ್ ಗಾಂಧಿ ಅವರೇ ಭರವಸೆ ನೀಡಿದ್ದರು. ಆದರೆ ಇದೀಗ ಅದು ನೆರವೇರಲಿಲ್ಲ. ಪಕ್ಷದಲ್ಲಿ ರಾಹುಲ್ ಗಾಂಧಿ ಅವರ ಮಾತಿಗೆ ಬೆಲೆ ಇಲ್ಲ. ಬೆಲೆ ಇದ್ದಿದ್ದರೆ ಈ ಹಿಂದೆ ಅವರು ಭರವಸೆ ನೀಡಿದಾಗಲೇ ನನಗೆ ಸಚಿವ ಸ್ಥಾನ ಕೊಡಿಸುತ್ತಿದ್ದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ನನ್ನ ಗಮನಕ್ಕೆ ಬಂದಿಲ್ಲ. ಇನ್ನು ಮುಂದೆ ನಾನು ಯಾವ ಮುಖಂಡರನ್ನೂ ಭೇಟಿ ಮಾಡುವುದಿಲ್ಲ. ಅದರ ಅಗತ್ಯವೂ ನನಗಿಲ್ಲ. ಈ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನವನ್ನು ಹಿಂಪಡೆದಿದ್ದರು. ಮತ್ತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ನೀಡುತ್ತಾರೆ ಎಂಬ ಕುರಿತು ಮಾಹಿತಿ ಇಲ್ಲ. ಆದರೆ, ನಾನು ಆ ಹುದ್ದೆಗೆ ಅರ್ಹನಾಗಿದ್ದೇನೆ ಎಂದು ಸುಧಾಕರ್ ತಿಳಿಸಿದರು.
ಇದೇ ವೇಳೆ ಮಧ್ಯಂತರ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಧ್ಯಂತರ ಚುನಾವಣೆಗೆ ಯಾರು ಸಿದ್ಧರಿದ್ದಾರೆ. ಲೋಕಸಭೆಯಲ್ಲಿ ಹೀನಾಯವಾಗಿ ಸೋತ ಮೇಲೂ ಗೆಲ್ಲುವ ಭರವಸೆ ಎಳ್ಳಷ್ಟೂ ಇಲ್ಲ. ಕೋಳಿವಾಡ ಹಿರಿಯರು ಅದ್ಯಾವ ನೆಲೆಗಟ್ಟಿನಲ್ಲಿ ಈ ಮಾತು ಹೇಳಿದ್ದಾರೆಯೋ ಗೊತ್ತಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ಸದ್ಯದ ಪರಿಸ್ಥಿತಿಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಹೋಗೋದೆಲ್ಲ ಸಾಧ್ಯವೇ ಇಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.