ಕಲಬುರಗಿ: ಆಳಂದ ಡಿಪೋ ಮ್ಯಾನೇಜರ್ ಚಂದ್ರಶೇಖರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಚಾಲಕ ಕಮ್ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಮಲ್ಲಿಕಾರ್ಜುನ ಕಡಗಂಚಿ ಆತ್ಮಹತ್ಯೆಗೆ ಯತ್ನಿಸಿದ ಎನ್ಇಕೆಎಸ್ಆರ್ ಟಿಸಿ ಚಾಲಕ ಕಮ್ ನಿರ್ವಾಹಕ. ಮಲ್ಲಿಕಾರ್ಜುನ್ ಮಂಗಳವಾರ ಸಂಜೆ 5 ಗಂಟೆಗೆ ಡಿಪೋ ಮ್ಯಾನೇಜರ್ ಚೇಂಬರ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಳಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸದ್ಯ ಡಿಪೋ ಮ್ಯಾನೇಜರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆಳಂದದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತವಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಆಳಂದ, ಕಲಬುರಗಿ ಸೇರಿ ತಮ್ಮ ತಮ್ಮ ಹಳ್ಳಿಗಳಿಗೆ ತೆರಳುವ ಪ್ರಯಾಣಿಕರು ಬಸ್ ಇಲ್ಲದೇ ಪರದಾಡುತ್ತಿದ್ದಾರೆ.