ಬಳ್ಳಾರಿ: ಸರ್ಕಾರದ ಆದೇಶದ ಮೇರೆಗೆ 7ನೇ ಆರ್ಥಿಕ ಗಣತಿ ಡಿ. 24ರಿಂದ ಪ್ರಾರಂಭವಾಗಿದ್ದು, ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗಣತಿಯ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಯಿತು.
ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಗಣತಿಯಲ್ಲಿ ಮನೆ ಹಾಗೂ ವಾಣಿಜ್ಯ ಕಟ್ಟಡ, ಸಂಕೀರ್ಣಗಳಲ್ಲಿ ನಡೆಯುತ್ತಿರುವ ವ್ಯಾಪಾರ, ಉದ್ಯಮದ ಬಗ್ಗೆ ಮಾಹಿತಿಯನ್ನು ಗಣತಿದಾರರು ಕೇಳಲಿದ್ದಾರೆ ಎಂದು ತಿಳಿಸಿದರು. ಸದರಿ ಗಣತಿದಾರರಿಗೆ ಎಲ್ಲಾ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮನೆಗಳಲ್ಲಿ ನಡೆಯುವ ಹೈನುಗಾರಿಕೆ, ಹೊಲಿಗೆ, ಅಂಗಡಿ ಇತರೆ ಸಣ್ಣಪುಟ್ಟ ವ್ಯಾಪಾರ ಗಣತಿಯೊಂದಿಗೆ ವಾಣಿಜ್ಯ ಕಟ್ಟಡಗಳಲ್ಲಿನ ಉದ್ಯಮಗಳ ಬಗ್ಗೆ ಮಾಹಿತಿ ಕಲೆಹಾಕಲಿದ್ದು, ಸದರಿ ಮಾಹಿತಿ ಆಧರಿಸಿ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆಗಳ ಮೂಲಕ ನಿರ್ಧಿಷ್ಟ ಉದ್ಯಮಗಳಿಗೆ ನೀಡಬೇಕಾದ ಸೌಲಭ್ಯ, ಸಹಕಾರಗಳ ಬಗ್ಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದರು.
ಸಾರ್ವಜನಿಕರು ಉದ್ಯಮಗಳ ಮಾಹಿತಿಯನ್ನು ನಿಖರವಾಗಿ ನೀಡಬೇಕು. ಸದರಿ ಗಣತಿಯನ್ನು ಮೊಬೈಲ್ ಆ್ಯಪ್ ಮೂಲಕ ನಡೆಸಲಾಗುವುದು ಹಾಗೂ ಎಲ್ಲಾ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದರು. ಹೀಗಾಗಿ ಯಾರು ಆತಂಕ ಪಡದೆ ಸರಿಯಾದ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.