ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಂದು ಬಿಗ್ ಶಾಕ್ ನೀಡಿದೆ. ದೆಹಲಿಯ ಮನೆಯಲ್ಲಿ ಸಿಕ್ಕ ಹಣ, ಬಳ್ಳಾರಿಯಲ್ಲಿನ ಸೋಲಾರ್ ಪವರ್ ಪ್ಲಾಂಟ್ (ಸೌರಶಕ್ತಿ ಉತ್ಪಾದನಾ ಸ್ಥಾವರ) ಬೆನ್ನಲ್ಲೇ ಈಗ ಮಾಜಿ ಸಚಿವರ ಆಪ್ತರೊಬ್ಬರ ಮನೆ ಮೇಲೆ ದಾಳಿ ಮಾಡಿದೆ.
ಡಿ.ಕೆ.ಶಿವಕುಮಾರ್ ಆಪ್ತ, ವಿಶೇಷ ಅಧಿಕಾರಿ ಆಂಜನೇಯ ಅವರ ನವದೆಹಲಿಯ ಆರ್.ಕೆ.ಪುರಂ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಂಜನೇಯ ಅವರು ಕಳೆದ 3 ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯೇ ಅವರ ನಿವಾಸದ ಮೇಲೆ ದಾಳಿ ಮಾಡಿ ಕೆಲವು ಮಹತ್ವದ ದಾಖಲೆಗಳನ್ನು ಪಡೆದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮಗಳ ಹೆಸರಲ್ಲಿಟ್ಟಿದ್ದ 78 ಕೋಟಿ ಹಣವೇ ಡಿಕೆಶಿಗೆ ಮುಳುವಾಯ್ತು
ಆಂಜನೇಯ ಅವರು ಡಿ.ಕೆ.ಶಿವಕುಮಾರ್ ಅವರ ದೆಹಲಿಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಶರ್ಮಾ ಟ್ರಾವೆಲ್ಸ್ ಮಾಲೀಕ ಸುನೀಲ್ ಶರ್ಮಾ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಕೆಲವು ಮಹತ್ವದ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಂಜನೇಯ ಅವರ ಮನೆ ಮೇಲೆ ಇಡಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಬೇನಾಮಿಯಾಗಿ ಅರಮನೆ ಆಸ್ತಿ ಖರೀದಿ – ಇಡಿ ಪ್ರಕರಣಕ್ಕೆ ತಿರುವು ಕೊಟ್ಟಿದ್ದೇ ವಿಶಾಲಾಕ್ಷಿ ದೇವಿ
ದೆಹಲಿಯಲ್ಲಿ ಪತ್ತೆಯಾಗಿದ್ದ 8.59 ಕೋಟಿ ರೂ. ಬಗ್ಗೆ ಆಂಜನೇಯ ಅವರಿಗೆ ಮಾಹಿತಿ ಇದೆ. ಹೀಗಾಗಿ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ಪದೇ ಪದೇ ದಾಳಿ ನಡೆಸುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ಸೋಮವಾರ ಮತ್ತೆ ದಾಳಿ ಮಾಡಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಇತ್ತ ಬಳ್ಳಾರಿಯ ಹಗರಿಬೊಮ್ಮನ ಹಳ್ಳಿಯಲ್ಲಿ 1,950 ಎಕರೆ ಭೂಮಿಯಲ್ಲಿರುವ ಸೋಲಾರ್ ಪವರ್ ಪ್ಲಾಂಟ್ನ ದಾಖಲೆಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಯೋಜನೆಯಲ್ಲಿ ಡಿಕೆಶಿಯವರದ್ದೇ ಶೇಕಡಾ 60ರಷ್ಟು ಪಾಲುದಾರಿಕೆ ಇದೆ ಎನ್ನಲಾಗಿದ್ದು, ಒಂದು ವೇಳೆ ಇದು ಅಕ್ರಮವೆಂದು ಮೇಲ್ನೋಟಕ್ಕೆ ಕಂಡುಬಂದಲ್ಲಿ ಈ ಆಸ್ತಿಯನ್ನ ಮುಟ್ಟುಗೋಲು ಹಾಕಿಕೊಳ್ಳಲು ಇಡಿಗೆ ಅವಕಾಶವಿದೆ. ಸದ್ಯ ಇಡಿ ಅಧಿಕಾರಿಗಳ ಸುಪರ್ದಿಗೆ ಸೊಲಾರ್ ಪವರ್ ಪ್ಲಾಂಟ್ನ ದಾಖಲೆಗಳು ಸಿಕ್ಕಿರುವುದು ಡಿಕೆಶಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಸೋಲಾರ್ ಪವರ್ ಪ್ಲಾಂಟ್ ಬಿಡಿಸಿಕೊಳ್ಳಬೇಕು ಎಂದರೆ ಡಿಕೆಶಿ ನ್ಯಾಯಾಲಯದ ಮೊರೆ ಹೋಗಬೇಕಿದೆ.