ಭಾರತದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು: ಗೆಹ್ಲೋಟ್

Public TV
2 Min Read
Thawarchand Gehlot 2

ಬೆಂಗಳೂರು: ಶಿಕ್ಷಣ (Education) ವ್ಯಕ್ತಿಯ ವೃತ್ತಿಜೀವನವನ್ನು ಯಶಸ್ವಿಗೊಳಿಸುವುದರ ಜೊತೆಗೆ ಜೀವನವನ್ನು ಅರ್ಥಪೂರ್ಣವಾಗಿಸುವಲ್ಲಿ ಸಹಾಯಕವಾಗುತ್ತದೆ. ಶಿಕ್ಷಣ ಮತ್ತು ಜ್ಞಾನವನ್ನು ಯಾರೂ ಕದಿಯಲು ಸಾಧ್ಯವಿಲ್ಲ. ಜ್ಞಾನ ಹಂಚಿದಷ್ಟು ವೃದ್ಧಿಯಾಗಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawarchand Gehlot) ಅವರು ಹೇಳಿದ್ದಾರೆ.

ಬೆಂಗಳೂರು ನಗರ ವಿಶ್ವವಿದ್ಯಾಲಯದ (Bengaluru City University) 3ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ವೇಳೆ ನಮ್ಮ ಸಂಸ್ಕøತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ದೇಶದ ಸಾಂಸ್ಕೃತಿಕ ಸಂಪ್ರದಾಯಗಳನ್ನು ಮತ್ತಷ್ಟು ಬಲಪಡಿಸುವಲ್ಲಿ, ದೇಶದಲ್ಲಿ ಸಮಾನತೆ ಮತ್ತು ಸಾಮರಸ್ಯದ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುವಲ್ಲಿ ಶಿಕ್ಷಣದ ಪಾತ್ರ ಪ್ರಮುಖ. ಇದರಿಂದ ದೇಶದ ಏಕತೆ ಮತ್ತು ಸಮಗ್ರತೆಯು ಬಲಗೊಳ್ಳುತ್ತದೆ. ಇದರೊಂದಿಗೆ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗವಾಗಿ ಚಲಿಸುತ್ತದೆ ಎಂದು ಹೇಳಿದರು.

Thawarchand Gehlot

ಪ್ರಾಚೀನ ಕಾಲದಲ್ಲಿ, ನಮ್ಮ ದೇಶ ಭಾರತವನ್ನು (India) ವಿಶ್ವ ಗುರು ಎಂದು ಕರೆಯಲಾಗುತ್ತಿತ್ತು. ನಳಂದ, ತಕ್ಷಶಿಲಾ, ವಿಕ್ರಮಶಿಲಾ ಮುಂತಾದ ವಿಶ್ವದರ್ಜೆಯ ಶಿಕ್ಷಣ ಸಂಸ್ಥೆಗಳಿದ್ದವು. ನಳಂದಾ ವಿಶ್ವವಿದ್ಯಾನಿಲಯವು ಭಾರತದ ಶ್ರೀಮಂತ ಶೈಕ್ಷಣಿಕ ಪರಂಪರೆಯ ಸಂಕೇತವಾಗಿದೆ ಮತ್ತು ಜಾಗತಿಕ ಜ್ಞಾನ ಮತ್ತು ಸಂಸ್ಕೃತಿಗೆ ಕೊಡುಗೆಯಾಗಿದೆ. ನಳಂದ ವಿಶ್ವವಿದ್ಯಾನಿಲಯವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನದಲ್ಲಿ, ನಳಂದ ಮಹಾವಿಹಾರದ ಬಳಿ ಕೆಲವು ಸಮಯದ ಹಿಂದೆ ಹೊಸ ನಳಂದ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಯಿತು. ಇದರ ಹೊಸ ಕ್ಯಾಂಪಸ್‍ನ್ನು ದೇಶದ ಪ್ರಧಾನಿ ಉದ್ಘಾಟಿಸಿದ್ದಾರೆ ಎಂದು ತಿಳಿಸಿದರು.

Thawarchand Gehlot 3

ಭಾರತೀಯ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಶಿಕ್ಷಣ ಸಂಸ್ಥೆಗಳು ಪ್ರಮುಖ ಕೊಡುಗೆಯನ್ನು ಹೊಂದಿವೆ. ಭಾರತದ ಆರ್ಥಿಕತೆಯು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಮತ್ತು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ. ಇದಕ್ಕೆ ಅಗತ್ಯ ಸಹಕಾರ ನೀಡಬೇಕು. ಸ್ವಾತಂತ್ರ್ಯ ಗಳಿಸಿ 75 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಪ್ರಸ್ತುತ ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. ಭಾರತವನ್ನು ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕಿದೆ. ಇದಕ್ಕೆ ಇಂದಿನ ಯುವಪೀಳಿಗೆ ಸಹಕಾರ ಅತ್ಯಗತ್ಯ. ಅದೇ ರೀತಿ ಶಿಕ್ಷಣ ಸಂಸ್ಥೆಗಳು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಾಗಿ ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದರು.

Thawarchand Gehlot 1

ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನದ ಪದಕ ಮತ್ತು ಪದವಿಗಳನ್ನು ಪಡೆದುಕೊಂಡಿದ್ದು, ಬಹಳ ಸಂತಸವಾಯಿತು. ಮಹಿಳೆಯರು ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯುತ್ತಿರುವುದು ಶ್ಲಾಘನೀಯ. ಮಹಿಳಾಭಿವೃದ್ಧಿಯಿಂದ ದೇಶ ಅಭಿವೃದ್ಧಿ ಸಾಧ್ಯ. ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ಗುರುತಿಸಿಕೊಂಡಿದ್ದಾರೆ. ಈ ಮೂಲಕ ಭಾರತ ವಿಕಸಿತ ಭಾರತವಾಗಿ ಶೀಘ್ರವಾಗಿ ಹೊರಹೊಮ್ಮಲಿದೆ ಎಂದರು.

ಸಮಾಜ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂ.ಆರ್.ಜೈರಾಮ್ ಮತ್ತು ವಿಶ್ವ ಪ್ರಸಿದ್ಧ ಕ್ರಿಕೆಟಿಗರು ಜಿ.ಆರ್.ವಿಶ್ವನಾಥ್ ಅವರಿಗೆ ಘಟಿಕೋತ್ಸವದಲ್ಲಿ ಗೌರವ ಪದವಿ ನೀಡಿ ಗೌರವಿಸಲಾಗಿದೆ. ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ಅವರ ಸಮಾಜ ಸೇವೆ ಕಾರ್ಯ ನಿರಂತರವಾಗಿರಲಿ ಎಂದು ಹಾರೈಸುತ್ತೇನೆ. ಹಾಗೇ, ಪದವಿಯನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

ಘಟಿಕೋತ್ಸವದಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಎಐಸಿಟಿಇ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಂ, ಕುಲಪತಿ ಪ್ರೊ.ಲಿಂಗರಾಜು ಗಾಂಧಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

Share This Article