ಮಂಡ್ಯ: ಮಳೆ ಅವಾಂತರದಿಂದ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದಿದೆ.
ಈ ಘಟನೆ ಜಿಲ್ಲೆಯ ಕೋಣನಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ಸುಮಾರು 8 ಗಂಟೆಗೆ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಹೊಳಲು ರಸ್ತೆಗೆ ಬರುತ್ತಿದ್ದಂತೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬ ಬಿದ್ದ ತಕ್ಷಣ ಭಯದಿಂದ ಪ್ರಯಾಣಿಕರು ಕಿರುಚಿಕೊಂಡಿದ್ದಾರೆ.
ಅದೃಷ್ಟವಶಾತ್ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ 50 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಳೆಗೆ ಆ ರಸ್ತೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಪರಿಣಾಮ ಹೊಳಲು ಮಂಡ್ಯ ಮಾರ್ಗ ಸಂಪೂರ್ಣ ಸ್ಥಗಿತಗೊಂಡಿದೆ. ವಿದ್ಯುತ್ ಕಂಬ ಉರುಳಿ ಬೀಳಲು ಕಳಪೆ ಕಾಮಗಾರಿ ಕಾರಣ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಕೇವಲ 15 ದಿನಗಳ ಹಿಂದಯಷ್ಟೇ ವಿದ್ಯುತ್ ಕಂಬ ನೆಡಲಾಗಿತ್ತು. ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದಾರೆ. ಇದರಲ್ಲಿ ಅಧಿಕಾರಿಳು ಶಾಮೀಲಾಗಿದ್ದಾರೆ ಎಂದು ಅವರ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.