ಮಡಿಕೇರಿ: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ (Elephant Attack) ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಶಾಲನಗರ ತಾಲ್ಲೂಕಿನ ಅತ್ತಿಮಂಗಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ರಸ್ತೆಗೇ ಏಕಾಏಕಿ ಬಂದ ಒಂಟಿ ಸಲಗ ದಾಳಿ ನಡೆಸಿದೆ. ಗಾಯಗೊಂಡವರನ್ನ ಸುಬ್ರಹ್ಮಣಿ (60) ಹಾಗೂ ಉಮೇಶ್ (53) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ದಟ್ಟವಾಗಿ ಬೆಳೆದಿದ್ದ ಗಿಡಗಂಟಿ ಮತ್ತು ಪೊದೆಗಳ ನಡುವೆ ಕಾಡಾನೆ ಅಡಗಿದ್ದರಿಂದ, ವಾಹನ ಸವಾರರಿಗೆ ಆನೆ ಕಾಣಿಸಿರಲಿಲ್ಲ ಎಂದು ತಿಳಿದುಬಂದಿದೆ.
ಬೈಕ್ನಲ್ಲಿ ಬರುತ್ತಿದ್ದ ಕಾರ್ಮಿಕರು ಕಾಡಾನೆಯ ಸಮೀಪಕ್ಕೆ ಬರುತ್ತಿದ್ದಂತೆ, ಏಕಾಏಕಿ ರಸ್ತೆಗಿಳಿದ ಆನೆ ದಾಳಿ ನಡೆಸಿದೆ. ಕ್ಷಣಮಾತ್ರದಲ್ಲಿ ನಡೆದ ದಾಳಿಯಿಂದ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಕೂಡಲೇ ಸಿದ್ಧಾಪುರ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಬದಿಯಲ್ಲಿ ಗಿಡಗಂಟಿ ಹಾಗೂ ಪೊದೆಗಳು ಅತಿಯಾಗಿ ಬೆಳೆದಿರುವುದರಿಂದ ಕಾಡಾನೆಗಳು ಅಡಗಿಕೊಳ್ಳಲು ಅನುಕೂಲವಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ಅಪಾಯ ಎದುರಾಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಖಾಸಗಿ ತೋಟಗಳ ಗಡಿ ಭಾಗದಲ್ಲೂ ಗಿಡಗಂಟಿ ದಟ್ಟವಾಗಿ ಬೆಳೆದಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ರಸ್ತೆಯಲ್ಲಿ ಆಗಾಗ್ಗೆ ಕಾಡಾನೆಗಳ ಓಡಾಟ ಕಂಡುಬರುತ್ತಿದ್ದು, ವಾಹನ ಸವಾರರು ಭಯದಿಂದಲೇ ಸಂಚರಿಸುವಂತಾಗಿದೆ. ರಸ್ತೆ ದುರಸ್ತಿಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದರೂ, ರಸ್ತೆ ಎರಡೂ ಬದಿಯಲ್ಲಿರುವ ಕಾಡು, ಪೊದೆ ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸಿ ವಾಹನ ಸವಾರರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.

