– ಸಚಿವ ಸಂಪುಟ ರಚಿಸಿ ಸಮಸ್ಯೆ ಪರಿಹರಿಸಲಿ
ಬೆಂಗಳೂರು: ರಾಜ್ಯದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವವಾಗಿದೆ, ಸಾರ್ವಜನಿಕರಿಗೆ ಬಹಳ ತೊಂದರೆ ಆಗಿದೆ. ಈ ಕುರಿತು ರಾಜ್ಯ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು. ಆದರೆ, ದುರ್ದೈವವೆಂಬಂತೆ ಕೇವಲ ಒಬ್ಬರೇ ಸಿಎಂ ಎಂದು ಸರ್ಕಾರದ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಹಿನ್ನೆಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವದ ಚುಕ್ಕಾಣಿ ಹಿಡಿಯುವವರೇ ಇಲ್ಲ. ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಕೇವಲ ಅಧಿಕಾರಿಗಳನ್ನು ಮಾತ್ರ ನಂಬಿಕೊಂಡು ಕೂರಲು ಸಾಧ್ಯವಿಲ್ಲ. ತಕ್ಷಣವೇ ಮಂತ್ರಿ ಮಂಡಲ ರಚನೆ ಮಾಡಿ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಮಳೆಯಿಂದಾಗಿರುವ ಹಾನಿ ಕುರಿತು ಪರಿಶೀಲಿಸಲು ನಮ್ಮ ಪಕ್ಷದಿಂದಲೂ ಸಮಿತಿ ರಚಿಸಲಾಗುತ್ತಿದೆ. ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ, ಬೆಳಗಾವಿ ಭಾಗದಲ್ಲಿ ಮಳೆ ಹಾನಿಯ ಪರೀಶಿಲನೆ ಮಾಡುತ್ತೇವೆ. ರಾಯಚೂರು ಭಾಗದಲ್ಲಿ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ವರದಿ ತಯಾರಿಸಲಾಗುವುದು ಎಂದು ಮಾಹಿತಿ ನೀಡಿದರು.
ವಿರೋಧ ಪಕ್ಷದಲ್ಲಿ ಕುಳಿತು ಕೇವಲ ರಾಜಕಾರಣ ಮಾಡುವುದಷ್ಟೇ ನಮ್ಮ ಕೆಲಸವಲ್ಲ. ಜನರಿಗೆ ತೊಂದರೆ ಆಗಿರುವ ಬಗ್ಗೆ ಸರ್ಕಾರಕ್ಕೆ ನಾವೂ ಕೂಡ ಮಾಹಿತಿ ನೀಡುತ್ತೇವೆ. ಸರ್ಕಾರ ಹೆಚ್ಚಿನ ರೀತಿಯಲ್ಲಿ ಕೆಲಸ ಕಾರ್ಯ ಮಾಡುವ ಅಗತ್ಯವಿದೆ. ಪ್ರವಾಹ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಗೋಕಾಕ್ ಕ್ಷೇತ್ರದ ಕಾರ್ಯಕರ್ತರು ಇಂದು ಭೇಟಿ ಮಾಡಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿಗೆ ತಕ್ಕ ಪಾಠ ಕಲಿಸುವಂತೆ ಮನವಿ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ದೂರು ಕೊಟ್ಟಿದ್ದು, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ತಕ್ಕ ಪಾಠ ಕಲಿಸಲು ತಯಾರಾಗಿದ್ದಾರೆ. ಕಾರ್ಯಕರ್ತರ ಮಾತುಗಳಲ್ಲಿ ಆಕ್ರೋಶ ಕಂಡು ಬರುತ್ತಿದೆ. ನಮಗೂ ಕಾರ್ಯಕರ್ತರ ಉತ್ಸಾಹ ನೋಡಿ ಅಶ್ಚರ್ಯವಾಗಿದೆ. ಮುಂದಿನ ದಿನಗಳಲ್ಲಿ ಮತದಾರರೇ ರಮೇಶ್ ಜಾರಕೊಹೊಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.